ದಾವಣಗೆರೆ: ರೈತರಿಗೆ ಮಾತ್ರವಲ್ಲ, ಜನಸಾಮಾನ್ಯರಿಗೆಲ್ಲ ತೊಂದರೆಯಾಗುವ ಮೂರು ಕಪ್ಪು ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಲೋಕಸಭೆ, ರಾಜ್ಯಸಭೆಯಲ್ಲಿ ಹೋರಾಟ ಮಾಡಲಾಗುವುದು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
‘ಮೊದಲು ಪಕ್ಷದ ಒಳಗೆ ಚರ್ಚಿಸಲಾಗುವುದು. ಬಳಿಕ ಪ್ರಾದೇಶಿಕ ಪಕ್ಷಗಳೊಂದಿಗೆ ಚರ್ಚಿಸಿ ಮುಂದಿನ ಪೂರಕ ಬಜೆಟ್ ಅಧಿವೇಶನದಲ್ಲಿ ನಮ್ಮ ನಿಲುವು, ಹೋರಾಟ ಹೇಗಿರಬೇಕು ಎಂಬ ರೂಪರೇಷೆ ತಯಾರಿಸಲಾಗುವುದು’ ಎಂದು ನಗರದಲ್ಲಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
‘ಉತ್ತರ ಭಾರತದವರಿಗಿಂತ ದಕ್ಷಿಣ ಭಾರತೀಯರು ಪ್ರಬುದ್ಧರು ಎಂದು ರಾಹುಲ್ ಗಾಂಧಿ ಯಾವ ಸಂದರ್ಭದಲ್ಲಿ ಹೇಳಿದ್ದರು ಎಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಅವರೊಂದಿಗೆ ಚರ್ಚೆ ಮಾಡುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಲೋಕಸಭೆಯಲ್ಲಿ ಪಕ್ಷದ ನಾಯಕನನ್ನಾಗಿ ನನ್ನನ್ನು ಮಾಡಿದಾಗ ಕರ್ನಾಟಕದಿಂದ ಬಂದ ಖರ್ಗೆ ಹೇಗೆ ಕೆಲಸ ಮಾಡುತ್ತಾರೆ ಎಂಬ ಅನುಮಾನಗಳು ಇದ್ದವು. 5 ವರ್ಷ ಹೇಗೆ ಕೆಲಸ ಮಾಡಿದ್ದೇನೆ ಎಂಬುದು ಗೊತ್ತು. ಇದೀಗ ರಾಜ್ಯಸಭೆಯ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಾಗಿದೆ. ಸೋನಿಯಾ ಗಾಂಧಿ ಮತ್ತು ಇತರ ನಾಯಕರು ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ. ಪಕ್ಷ, ಜನರು ಮತ್ತು ಮಾಧ್ಯಮ ಸಹಕಾರ ನೀಡಿದರೆ ಉತ್ತಮ ಕೆಲಸ ಮಾಡಲು ಸಾಧ್ಯ’ ಎಂದು ತಿಳಿಸಿದರು.
‘ನಾನು ಸತತ 12 ಚುನಾವಣೆಗಳನ್ನು ಎದುರಿಸಿದ್ದೇನೆ. ಅದರಲ್ಲಿ ಕೊನೆಯ ಚುನಾವಣೆಯ ಸಂದರ್ಭದಲ್ಲಿ ಆರ್ಎಸ್ಎಸ್, ಬಿಜೆಪಿ, ಸ್ವತಃ ನರೇಂದ್ರ ಮೋದಿ ಟಾರ್ಗೆಟ್ ಮಾಡಿದ್ದರಿಂದ ಯಶಸ್ಸು ಕಾಣಲಿಲ್ಲ. ಜನ ಈಗ ವಿಶ್ಲೇಷಣೆ ಮಾಡುತ್ತಿದ್ದಾರೆ. ಪಶ್ಚಾತ್ತಾಪ ಪಡುತ್ತಿದ್ದಾರೆ’ ಎಂದರು.