ಚನ್ನಗಿರಿ: ‘ರಾಜ್ಯದಲ್ಲಿ ಎರಡನೇ ಅಲೆ ತೀವ್ರಗೊಂಡಿದ್ದು, ಈ ಸಮಯದಲ್ಲಿ ಸಚಿವರು ಹಾಗೂ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿದ್ದು, ಕೊರೊನಾ ಸೋಂಕಿತರ ಸಂಕಷ್ಟಗಳಿಗೆ ನೆರವಾಗುವುದನ್ನು ಬಿಟ್ಟು, ಮುಖ್ಯಮಂತ್ರಿ ಬದಲಾವಣೆಗಾಗಿ ತೆರಳಿರುವುದು ಸರಿಯಾದ ಕ್ರಮವಲ್ಲ. ಮುಂದಿನ ಎರಡು ವರ್ಷ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರಿ ಯಲಿದ್ದಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದೆ’ ಎಂದು ಕೆಎಸ್ಡಿಎಲ್ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕೋವಿಡ್ ಕೇಂದ್ರಗಳಿಗೆ ವೈಯಕ್ತಿಕವಾಗಿ ಮೈಸೂರು ಸ್ಯಾಂಡಲ್ ಸೋಪು, ಸ್ಯಾನಿಟೈಸರ್ ಹಾಗೂ ಮಾಸ್ಕ್ಗಳನ್ನು ವಿತರಿಸಿ ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ 104 ಸ್ಥಾನಗಳಲ್ಲಿ ಗೆಲ್ಲಲು ಯಡಿಯೂರಪ್ಪ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಹಾಗೆಯೇ ಉತ್ತಮ ಆಡಳಿತವನ್ನು ನೀಡುವ ಮೂಲಕ ಜನಪರ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಏನೇ ಭಿನ್ನಾಭಿಪ್ರಾಯ ಗಳು ಇದ್ದರೂ ಮುಖ್ಯಮಂತ್ರಿಯ ವರೊಂದಿಗೆ ಚರ್ಚಿಸಿ, ಬಗೆಹರಿಸಿ ಕೊಳ್ಳಬೇಕು. ಮುಖ್ಯಮಂತ್ರಿ ಬದಲಾವಣೆ ಸಂಬಂಧ ಹೈಕಮಾಂಡ್ ಚಿಂತನೆ ಮಾಡಿಲ್ಲ. ಸಚಿವರು, ಶಾಸಕರು ಮೊದಲು ಕ್ಷೇತ್ರಗಳ ಜನರ ಸಂಕಷ್ಟಗಳಿಗೆ ಸ್ಪಂದಿಸಲಿ ಎಂದು ಸಲಹೆ ನೀಡಿದರು.
ಎರಡನೇ ಅಲೆ ರಾಜ್ಯದಲ್ಲಿ ಇಳಿಮುಖ ವಾಗುತ್ತಿದೆ. ಆದರೂ ಗ್ರಾಮೀಣ ಪ್ರದೇಶಗಳಲ್ಲಿ ಜನರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸದೇ ಇರುವುದರಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುವವರಿಗೆ ನಾಳೆಯಿಂದ ಪೌಷ್ಟಿಕ ಆಹಾರ, ಸಿಹಿ ಊಟ ನೀಡಲಾಗುವುದು ಎಂದು ಹೇಳಿದರು.
ಪ್ರಭಾರ ತಹಶೀಲ್ದಾರ್ ಅರುಣ್ ಕುಮಾರ್, ಸಿಪಿಐ ಮಧು, ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಿ, ಮುಖ್ಯಾಧಿಕಾರಿ ಈ. ಬಸವರಾಜ್, ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್. ಪ್ರಕಾಶ್, ಆಡಳಿತ ವೈದ್ಯಾಧಿಕಾರಿ ಡಾ. ಅಶೋಕ್, ತಾಲ್ಲೂಕು ವೈದ್ಯಾಧಿಕಾರಿ ಡಾ. ಪ್ರಭು ಇದ್ದರು.