ಹರಿಹರ: ಎರಡೂ ರಾಷ್ಟ್ರೀಯ ಪಕ್ಷಗಳು ಪಂಚಮಸಾಲಿ ಸಮಾಜವನ್ನು ಕಡೆಗಣಿಸಿವೆ ಎಂದು ಮುನಿಸಿಕೊಂಡಿದ್ದ ವಚನಾನಂದ ಶ್ರೀಗಳನ್ನು ಬಿಜೆಪಿಯ ರಾಜ್ಯಸಭಾ ಸದಸ್ಯ ಲೆಹರ್ಸಿಂಗ್ ಭಾನುವಾರ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಆಗಮಿಸಿ ಮನವೊಲಿಸುವ ಪ್ರಯತ್ನ ಮಾಡಿದರು.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜ್ಯದಲ್ಲಿ ಬಹುಸಂಖ್ಯಾತರಾದ ಪಂಚಮಸಾಲಿ ಸಮುದಾಯಕ್ಕೆ ಆದ್ಯತೆ ನೀಡದೆ ಅನ್ಯಾಯ ಮಾಡಿವೆ. ಸಮಾಜದ ಮತದಾರರು ಇವೆರಡೂ ಪಕ್ಷಗಳ ಬಗ್ಗೆ ನಿರ್ಲಿಪ್ತ ಧೋರಣೆ ತಾಳಬೇಕು ಎಂದು ಶ್ರೀಗಳು ಇತ್ತೀಚಿಗೆ ಸುದ್ದಿಗೋಷ್ಠಿಯಲ್ಲಿ ಕರೆ ನೀಡಿದ್ದರು.
ಇದೆ ಕಾರಣಕ್ಕೆ ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಅವರ ಪ್ರತಿನಿಧಿಯಾಗಿ ಆಗಮಿಸಿದ್ದ ಲೆಹರ್ ಸಿಂಗ್, ‘ಮುಂಬರುವ ದಿನಗಳಲ್ಲಿ ಚುನಾವಣಾ ಅಭ್ಯರ್ಥಿಗಳ ಆಯ್ಕೆ ಹಾಗೂ ಪಕ್ಷದ ಹುದ್ದೆಗಳನ್ನು ನೀಡುವಲ್ಲಿ ಪಂಚಮಸಾಲಿ ಸಮುದಾಯವನ್ನು ಪರಿಗಣಿಸುವುದಾಗಿ ವರಿಷ್ಠರು ಭರವಸೆ ನೀಡಿದ್ದಾರೆ’ ಎಂದರು.
ಈ ವೇಳೆ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರವಾಲ್, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಹ ಶ್ರೀಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರೆಂದು ಗುರುಪೀಠದ ಆಡಳಿತಾಧಿಕಾರಿ ಡಾ. ರಾಜಕುಮಾರ್ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಗುರುಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ಪೀಠದ ಆಡಳಿತಾಧಿಕಾರಿ ಡಾ.ರಾಜಕುಮಾರ್ ಪಾಟೀಲ್, ಧರ್ಮದರ್ಶಿ ಚಂದ್ರಶೇಖರ್ ಪೂಜಾರ್ ಇದ್ದರು.