ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ. 23ರಿಂದ ವೀರಶೈವ–ಲಿಂಗಾಯತ ಮಹಾ ಅಧಿವೇಶನ

ಗುರು–ವಿರಕ್ತರು, ವಿವಿಧ ರಾಜ್ಯಗಳ ಗಣ್ಯರ ಆಹ್ವಾನಕ್ಕೆ ತೀರ್ಮಾನ
Published 6 ಅಕ್ಟೋಬರ್ 2023, 16:50 IST
Last Updated 6 ಅಕ್ಟೋಬರ್ 2023, 16:50 IST
ಅಕ್ಷರ ಗಾತ್ರ

ದಾವಣಗೆರೆ: ‘ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನವನ್ನು ಡಿಸೆಂಬರ್‌ 23, 24ರಂದು ಇಲ್ಲಿನ ಎಂಬಿಎ ಕಾಲೇಜು ಮೈದಾನದಲ್ಲಿ ನಡೆಸಲು ಉದ್ದೇಶಿಸಲಾಗಿದೆ’ ಎಂದು ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ತಿಳಿಸಿದರು.

ಅಧಿವೇಶನ ಸಂಬಂಧ ನಗರದಲ್ಲಿ ಶುಕ್ರವಾರ ನಡೆದ ಮಹಾಸಭಾದ ಪೂರ್ವಭಾವಿ ಸಭೆಯ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ವೀರಶೈವ–ಲಿಂಗಾಯತ ಸಮುದಾಯಕ್ಕೆ ಒಬಿಸಿ ಮೀಸಲಾತಿ, ಸಮುದಾಯ ಎದುರಿಸುತ್ತಿರುವ ಸವಾಲು, ಸಮಸ್ಯೆಗಳ ಬಗ್ಗೆ ಈ ಅಧಿವೇಶನದಲ್ಲಿ ಚರ್ಚಿಸಲಾಗುವುದು. ಹಲವು ನಿರ್ಣಯಗಳನ್ನು ಅಂಗೀಕರಿಸಲಾಗುವುದು. ಸುತ್ತೂರು ಶ್ರೀ, ಸಿದ್ಧಗಂಗಾಶ್ರೀ, ಗುರು–ವಿರಕ್ತರು ಸೇರಿದಂತೆ ಎಲ್ಲ ಮಠಾಧೀಶರನ್ನು ಆಹ್ವಾನಿಸಲಾಗುವುದು’ ಎಂದರು.

‘‍ಪ್ರತಿ 5 ವರ್ಷಗಳಿಗೊಮ್ಮೆ 3 ದಿನ ಅಧಿವೇಶನ ನಡೆಸಲಾಗುತ್ತಿತ್ತು. ಕೋವಿಡ್‌ ಕಾರಣ ಅಧಿವೇಶನ ನಡೆದಿರಲಿಲ್ಲ. ಬರಗಾಲದ ಕಾರಣ ಈ ಬಾರಿ ಎರಡು ದಿನಕ್ಕೆ ಸೀಮಿತಗೊಳಿಸಲಾಗಿದೆ. ಮಹಿಳಾ ವಿಚಾರಗೋಷ್ಠಿ, ಯುವ, ರೈತ ಗೋಷ್ಠಿ ನಡೆಯಲಿದೆ. ಈ ಸಂದರ್ಭ ಸ್ಮರಣ ಸಂಚಿಕೆಯನ್ನೂ ಬಿಡುಗಡೆ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಉಪಾಧ್ಯಕ್ಷರಾದ ಎನ್‌.ತಿಪ್ಪಣ್ಣ, ಅಥಣಿ ವೀರಣ್ಣ, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್‌ ಬಿದರಿ, ವಿಧಾನಪರಿಷತ್‌ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ಮಹಾಸಭಾದ ವಿವಿಧ ಜಿಲ್ಲಾ ಘಟಕಗಳ ಪದಾಧಿಕಾರಿಗಳು, ಆಂಧ್ರಪ್ರದೇಶ, ಮಹಾರಾಷ್ಟ್ರದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Cut-off box - ಲಿಂಗಾಯತ ಸಿಎಂ: ಕುರ್ಚಿ ಖಾಲಿ ಇಲ್ಲ ‘ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಿರುವಾಗ ಲಿಂಗಾಯತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು. ‘ರಾಜ್ಯದಲ್ಲಿ ನಡೆಸಲಾದ ಜಾತಿ ಗಣತಿ ವರದಿ ಬಿಡುಗಡೆ ಸಂಬಂಧ ಸಚಿವ ಸಂಪುಟದಲ್ಲಿ ಪ್ರಾಥಮಿಕ ಹಂತದ ಚರ್ಚೆ ನಡೆದಿದೆ. ಈ ಕುರಿತು ಮತ್ತೊಮ್ಮೆ ಚರ್ಚಿಸಿದಾಗ ನಮ್ಮ ಅಭಿಪ್ರಾಯ ತಿಳಿಸುತ್ತೇವೆ’ ಎಂದರು. ‘ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯ ಆಗುತ್ತಿದೆ ಎಂಬ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಕುರಿತು ಸಭೆಯಲ್ಲಿ ಯಾವುದೇ ರೀತಿಯ ಚರ್ಚೆ ಆಗಿಲ್ಲ. ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ನಮ್ಮದು ಸಮಬಾಳು– ಸಮಪಾಲು ತತ್ವದ ಸರ್ಕಾರ. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಲಾಗುವುದು’ ಎಂದು ತಿಳಿಸಿದರು. ಪ್ರತಿಕ್ರಿಯೆಗೆ ಶಾಮನೂರು ನಕಾರ: ‘ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯವಾಗಿದೆ ಎಂಬ ಹೇಳಿಕೆ ನೀಡಿದ್ದರ ಕುರಿತು ಮುಖ್ಯಮಂತ್ರಿ ನಿಮ್ಮೊಂದಿಗೆ ಚರ್ಚೆ ನಡೆಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಶಾಸಕ ಶಾಮನೂರು ಶಿವಶಂಕರಪ್ಪ ‘ಅದೆಲ್ಲ ಸೀಕ್ರೆಟ್‌ ನಿಮ್ಮ ಮುಂದೆ ಹೇಳಲಾಗದು’ ಎಂದರು. ಈ ಹೇಳಿಕೆ ನೀಡಿದ್ದಕ್ಕೆ ಪಕ್ಷದ ಹೈಕಮಾಂಡ್‌ ನಿಮಗೆ ಯಾವುದಾದರೂ ಸೂಚನೆ ನೀಡಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಯಾವ ಹೈಕಮಾಂಡ್‌ ಇಲ್ಲ ಏನೂ ಇಲ್ಲ ನಡೀರಪ್ಪ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT