ಪಟ್ನಾ/ಇಂಫಾಲಾ/ಪಣಜಿ (ಪಿಟಿಐ): ಕರ್ನಾಟಕ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಉದಾಹರಣೆಯಾಗಿ ನೀಡಿರುವ ಬಿಹಾರ, ಗೋವಾ ಹಾಗೂ ಮಣಿಪುರದ ಅತಿ ದೊಡ್ಡ ಪಕ್ಷಗಳ ನಾಯಕರು, ತಮಗೂ ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದು ಶುಕ್ರವಾರ ಆಯಾ ರಾಜ್ಯಗಳ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ.
‘ಕರ್ನಾಟಕದಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷ ಎನ್ನುವ ಆಧಾರದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿದ್ದು ಸೂಕ್ತವಾಗಿದ್ದರೆ ಅದೇ ಮಾನದಂಡವನ್ನು ಬಿಹಾರಕ್ಕೂ ಅನ್ವಯಿಸಬೇಕು’ ಎಂದು ಬಿಹಾರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.
ಮಣಿಪುರದ ಮಾಜಿ ಮುಖ್ಯಮಂತ್ರಿ ಒಕ್ರಮ್ ಇಬೋಬಿ ಸಿಂಗ್ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಹಂಗಾಮಿ ರಾಜ್ಯಪಾಲ ಜಗದೀಶ್ ಮುಖಿ ಅವರನ್ನು ಭೇಟಿ ಮಾಡಿ, ಸರ್ಕಾರ ರಚನೆಗೆ ಅವಕಾಶ ನೀಡಲು ಮನವಿ ಸಲ್ಲಿಸಿದೆ.
ಗೋವಾದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಚಂದ್ರಕಾಂತ್ ಕವಲೆಕರ್ ಅವರು ರಾಜ್ಯಪಾಲರಾದ ಮೃದುಲಾ ಸಿನ್ಹಾ ಅವರನ್ನು ಭೇಟಿ ಮಾಡಿ,
ತಮಗೆ ಸರ್ಕಾರ ರಚನೆಗೆ ಆಹ್ವಾನ ನೀಡಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದಾರೆ.