ಬೆಳಿಗ್ಗೆಯಿಂದಲೇ ನಗರದ ಹಲವೆಡೆ ಅಂಗಡಿಗಳನ್ನು ಮುಚ್ಚಲಾಗಿದೆ. ಇನ್ನೂ ಕೆಲವೆಡೆ ಕೆಲವು ಮಳಿಗೆಗಳನ್ನು ತೆರೆಯಲಾಗಿದೆ.
ನಗರದ ಜಯದೇವ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾರಿಗೆ ಬಸ್ ಗಳ ಓಡಾಟ ಬಹುತೇಕ ಸ್ಥಗಿತಗೊಂಡಿದೆ. ಪಕ್ಕದಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಕೆಲವು ಬಸ್ ಗಳ ಸಂಚಾರ ಕಂಡುಬಂತು.
ವಾಣಿಜ್ಯ ಪ್ರದೇಶವಾದ ಮಂಡಿಪೇಟೆ, ಕಾಳಿಕಾದೇವಿ ರಸ್ತೆ, ಕೆ.ಆರ್.ಮಾರುಕಟ್ಟೆ, ಬಿನ್ನಿಕಂಪನಿ ರಸ್ತೆ, ಚಾಮರಾಜಪೇಟೆ, ಎಂ.ಜಿ.ರಸ್ತೆಯಲ್ಲಿ ರೈತರ ಹೋರಾಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂಗಾರದ ಅಂಗಡಿ, ಪ್ರಾವಿಜನ್ ಸ್ಟೋರ್, ಹೋಟೆಲ್, ಇನ್ನಿತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿದೆ.
ತರಕಾರಿ, ಹಣ್ಣು, ತಳ್ಳುಗಾಡಿಯ ಹೋಟೆಲ್ಗಳ ವ್ಯಾಪಾರ ಎಂದಿನಂತೆ ನಡೆಯುತ್ತಿದೆ.
ನಗರದ ಪ್ರಮುಖ ವೃತ್ತಗಳಲ್ಲಿ ಬಂದ್ ವಾತಾವರಣ ಇದೆ. ಇನ್ನುಳಿದ ಕಡೆಗಳಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರ ಸಾರಿಗೆಯಲ್ಲಿ ವ್ಯತ್ಯಯ ಉಂಟಾಗಿದ್ದು ಪ್ರಯಾಣಿಕರು ಆಟೊಗಳಲ್ಲಿ ಸಂಚರಿಸುತ್ತಿದ್ದಾರೆ.
ಬಂದ್ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಬಂದ್ ಗೆ ಕನ್ನಡಪರ ಸಂಘಟನೆಗಳು, ಆಮ್ ಆದ್ಮಿ ಪಕ್ಷ, ಬಿಜೆಪಿ, ದಲ್ಲಾಲರ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳೂ ಬೆಂಬಲ ವ್ಯಕ್ತಪಡಿಸಿವೆ.