ದಾವಣಗೆರೆ: ಶಿರಾದಲ್ಲಿ ನಡೆಯುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆಗಳು, ಶಕ್ತಿಕೇಂದ್ರಗಳನ್ನು ಬಲಪಡಿಸುವ ಕೆಲಸಗಳು ಆಗಿವೆ. ಶತಾಯ ಗತಾಯ ಈ ಬಾರಿ ಬಿಜೆಪಿ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಐದಾರು ಜನ ಆಕಾಂಕ್ಷಿಗಳಿದ್ದಾರೆ. ಕುಳಿತು ಮಾತನಾಡಿ ಅವರಲ್ಲಿ ಒಬ್ಬರನ್ನು ಕಣಕ್ಕಿಳಿಸಲಾಗುವುದು’ ಎಂದರು.
‘ಹಿಂದೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದಾಗ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಾಡಿತ್ತು. ಅದನ್ನು ಸಿದ್ದರಾಮಯ್ಯ ಸರ್ಕಾರ ವಾಪಸ್ ಪಡೆದಿತ್ತು. ಅವರ ಕಾಲದಲ್ಲಿ ಹಟ್ಟಿಗೆ ನುಗ್ಗಿ ಗೋವು ಕಳವು ಮಾಡಲಾಗುತ್ತಿತ್ತು. ಈಗ ಅಂಥ ಪ್ರಸಂಗಗಳಿಲ್ಲ. ಮುಂದೆ ಗೋಹತ್ಯೆ ನಿಷೇಧ ಮಾಡುತ್ತೇವೆ’ ಎಂದು ಪ್ರತಿಕ್ರಿಯಿಸಿದರು.
‘ಭ್ರಷ್ಟಾಚಾರ ಪ್ರಕರಣ ಮುಚ್ಚಿ ಹಾಕಲು ‘ಪವರ್ ಟಿವಿ’ ಬಂದ್ ಮಾಡಲಾಗಿದೆಯೇ’ ಎಂಬ ಪ್ರಶ್ನೆಗೆ, ‘ಭ್ರಷ್ಟಾಚಾರ ಆರೋಪದ ಬಗ್ಗೆ ಅಧಿವೇಶನದಲ್ಲಿಯೇ ಉತ್ತರ ಕೊಟ್ಟಿದ್ದಾರೆ. ಈ ಬಗ್ಗೆ ವರಿಷ್ಠರ ಜತೆಗೆ ಚರ್ಚಿಸಲಾಗುವುದು’ ಎಂದು ತಿಳಿಸಿದರು.