ಚನ್ನಗಿರಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬುಧವಾರ ಉತ್ತಮವಾದ ಮಳೆ ಬಿದ್ದಿದ್ದು, ರೈತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಕಳೆದ ಎರಡು ದಿನಗಳಿಂದ ತಾಲ್ಲೂಕಿನಾದ್ಯಂತ ಹಲವಾರು ಗ್ರಾಮಗಳಲ್ಲಿ ಚದುರಿದಂತೆ ಸಾಧಾರಣವಾಗಿ ಮುಂಗಾರು ಮಳೆ ಬೀಳುತ್ತಿದೆ.
ಇದರಿಂದ ಉತ್ಸಾಹಗೊಂಡ ರೈತರು ಬಿತ್ತನೆ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಕಳೆದ ಒಂದು ವಾರದಿಂದ ಮುಂಗಾರು ಮಳೆಯ ಅನಿಶ್ಚಿತತೆ ಕಾಡಿತ್ತು. ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಕ್ಕೆ ಹಿನ್ನಡೆಯಾಗಿತ್ತು. ಅಡಿಕೆ ಹಾಗೂ ಮೆಕ್ಕೆಜೋಳ ಬೆಳೆಗಳನ್ನು ವಾಣಿಜ್ಯ ಬೆಳೆಯನ್ನಾಗಿ ತಾಲ್ಲೂಕಿನಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ.
ಎರಡು ದಿನಗಳಿಂದ ವಿವಿಧ ಗ್ರಾಮಗಳಲ್ಲಿ ಮುಂಗಾರು ಮಳೆಯಾಗುತ್ತಿರುವ ಕಾರಣ ರೈತರು ಬಿತ್ತನೆ ಕಾರ್ಯವನ್ನು ಚುರುಕುಗೊಳಿಸಿದ್ದಾರೆ ಎಂದು ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್ನಾಯ್ಕ ತಿಳಿಸಿದರು.
ಇದುವರೆಗೆ ಕೆರೆಕಟ್ಟೆಗಳಿಗೆ ಹಾಗೂ ಹಳ್ಳಕೊಳ್ಳಗಳಲ್ಲಿ ನೀರು ಸಂಗ್ರಹ ವಾಗುವಷ್ಟು ದೊಡ್ಡ ಪ್ರಮಾಣದಲ್ಲಿಮಳೆ ಬಿದ್ದಿಲ್ಲ. ರೈತರ ಬಿತ್ತನೆ ಕಾರ್ಯಕ್ಕೆ ಹಾಗೂ ಬೆಳೆಗಳ ಬೆಳವಣಿಗೆಗೆ ಸಹಕಾರಿಯಾಗುವಷ್ಟು ಪ್ರಮಾಣದಲ್ಲಿ ಮಾತ್ರ ಮಳೆ ಬೀಳುತ್ತಿದೆ.