ದಾವಣಗೆರೆ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕರೆಯಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡ ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಗೆ ಜನಪ್ರತಿನಿಧಿಗಳೂ ಸೇರಿದಂತೆ ಅಧಿಕಾರಿಗಳು ಗೈರು ಹಾಜರಾಗಿದ್ದರು.
ಸಭೆಯಲ್ಲಿ ಹಾಜರಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬಿ. ಕೃಷ್ಣಪ್ಪ ಬಣ)ಯ ರಾಜ್ಯ ಸಂಚಾಲಕ ಆಲೂರು ನಿಂಗರಾಜ್ ಮಾತನಾಡಿ, `ಪರಿಶಿಷ್ಟರ ಮೇಲೆ ದೌರ್ಜನ್ಯ ಮಾಡಿ ಮೊದಲೇ ಅವರ ಮೇಲೆ ಶೋಷಣೆ ಮಾಡಲಾಗುತ್ತಿದೆ. ಇನ್ನು ಇಂತಹ ಸಭೆಗಳಿಗೆ ಜನಪ್ರತಿನಿಧಿಗಳು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗುವ ಮೂಲಕ ಪರಿಶಿಷ್ಟರ ಬಗ್ಗೆ ಅವರಿಗೆಷ್ಟು ಕಾಳಜಿ ಇದೆ ಎಂಬುದು ಮನವರಿಕೆಯಾಗುತ್ತದೆ. ಸಭೆಗೆ ಗೈರುಹಾಜರಾದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಂಡು, ನೋಟಿಸ್ ಜಾರಿಗೊಳಿಸಬೇಕು~ ಎಂದು ಒತ್ತಾಯಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಚ್. ವಿಜಯಕುಮಾರ್ ಮಾತನಾಡಿ, `ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಸಭೆಯ ಕುರಿತು ಮಾಹಿತಿ ನೀಡಲಾಗಿತ್ತು. ಆದರೆ, ಅವರ ಗೈರುಹಾಜರಾಗಿರುವ ಹಿಂದಿನ ಕಾರಣ ತಿಳಿದುಬಂದಿಲ್ಲ. ಗೈರುಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು. ಇಂದಿನ ಸಭೆಯನ್ನು ಮುಂದೂಡಲಾಗಿದೆ~ ಎಂದು ಪ್ರಕಟಿಸಿದರು.
ಸಭೆಯಲ್ಲಿ ಹೆಚ್ಚುವರಿ ಎಸ್ಪಿ ಚವಾಣ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೇಮಚಂದ್ರ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪಿ.ಕೆ. ಮಹಾಂತೇಶ್, ಸರ್ಕಾರಿ ಅಭಿಯೋಜಕ ಬಣಕಾರ್, ಕಾರ್ಮಿಕ ಅಧಿಕಾರಿ ಯೋಗೇಶ್ವರಪ್ಪ, ಸಮಿತಿಯ ಸದಸ್ಯರಾದ ಸುರೇಶ್ ದೊಡ್ಮನಿ ಮತ್ತು ಎಚ್. ಮಲ್ಲೇಶ್ ಹಾಜರಿದ್ದರು.