ಹೊನ್ನಾಳಿ: ನಿವೃತ್ತ ನೌಕರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷ ಡಿ.ಎನ್. ಸಂಪತ್ ಹೇಳಿದರು.
ಇಲ್ಲಿನ ಸರ್ಕಾರಿ ನೌಕರರ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ 75 ವರ್ಷ ಮೇಲ್ಪಟ್ಟ ನಿವೃತ್ತ ನೌಕರರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ನಿವೃತ್ತರ ಕಲ್ಯಾಣಕ್ಕೆ ಅಧಿಕಾರಿಗಳು ಸಮರ್ಪಕ ಯೋಜನೆ ರೂಪಿಸಬೇಕು. ನಿವೃತ್ತಿ ವೇತನ ಸಕಾಲಕ್ಕೆ ದೊರೆಯದ ಕಾರಣ ಅನೇಕ ವೃದ್ಧರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಹೀನ ಸ್ಥಿತಿ ಹೋಗಲಾಡಿಸಲು ಎಲ್ಲರೂ ಮುಂದಾಗಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರೇವಣಸಿದ್ದಯ್ಯ ಮಾತನಾಡಿ, ನಿವೃತ್ತ ನೌಕರರ ಜೀವನ ಮಟ್ಟ ತೀರಾ ಕೆಳ ಹಂತದಲ್ಲಿದೆ. ಸರ್ಕಾರ ನಿವೃತ್ತ ನೌಕರರಿಗೆ ಕನಿಷ್ಟ ನಿವೃತ್ತಿ ವೇತನ ನೀಡದೇ ಸತಾಯಿಸುತ್ತಿದೆ. ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಎಲ್ಲಾ ನಿವೃತ್ತರೂ ಸಂಘಟಿತರಾಗಿ ಹೋರಾಡಬೇಕು ಎಂದರು.
ನಿವೃತ್ತಿ ವೇತನ ನೌಕರನ ಮೂಲಭೂತ ಹಕ್ಕು. ಅದು ಅನುಕಂಪ ಇಲ್ಲವೇ ಭಿಕ್ಷೆ ಅಲ್ಲ. ನಿವೃತ್ತರು ಸರ್ಕಾರ ಮತ್ತು ಜನಪ್ರತಿನಿಧಿಗಳ ಮೇಲೆ ಒತ್ತಡ ಹಾಕಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಜೀನಹಳ್ಳಿ ಮಾತನಾಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎಚ್. ಗೋವಿಂದಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಂಘದ ಜಿಲ್ಲಾ ಅಧ್ಯಕ್ಷ ಬಿ.ಆರ್. ಶಂಕ್ರಪ್ಪ, ಶಶಿಧರ್, ಸಿ. ದಳವಾಯಪ್ಪ, ಎಂ. ಜಯಪ್ಪ, ಡಿ. ನಿರಂಜನಮೂರ್ತಿ, ಆರ್.ಎಫ್. ಬಳಿಗಾರ್, ಪಿ. ಯೋಗೇಶ್ವರಪ್ಪ ಇತರರು ಉಪಸ್ಥಿತರಿದ್ದರು.
ತಾಲ್ಲೂಕಿನ ವಿವಿಧ ಭಾಗಗಳಿಂದ ನೂರಾರು ನಿವೃತ್ತ ನೌಕರರು ಭಾಗವಹಿಸಿದ್ದರು. 75 ವರ್ಷಕ್ಕೂ ಮೇಲ್ಪಟ್ಟ ನಿವೃತ್ತ ನೌಕರರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಪ್ರೇಮ್ಕುಮಾರ್ ಬಂಡಿಗಡಿ ಕಾರ್ಯಕ್ರಮ ನಿರ್ವಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.