ಹುಬ್ಬಳ್ಳಿ: ಇಲ್ಲಿನ ಲಿಂಗರಾಜ ನಗರದಲ್ಲಿ ಮನೆಗೆಲಸಕ್ಕೆ ನೇಮಕಗೊಂಡಿದ್ದ ಬಾಲಕನೊಬ್ಬನನ್ನು ಅಧಿಕಾರಿಗಳು ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಿದ್ದಾರೆ. ಅಧಿಕಾರಿಗಳು ಶೋಧ ನಡೆಸಿದ ಸಂದರ್ಭದಲ್ಲಿ ಬಾಲಕ ಕೆಲಸ ಮಾಡುತ್ತಿರುವುದು ಕಂಡುಬಂದಿದೆ.
ಸಹಾಯಕ ಕಾರ್ಮಿಕ ಆಯುಕ್ತರ ನಿರ್ದೇಶನದ ಮೇರೆಗೆ, ಕಾರ್ಮಿಕ ಅಧಿಕಾರಿ ಮಾರಿಕಾಂಬಾ ಹುಲಕೋಟಿ ಅವರ ನೇತೃತ್ವದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಬಾಲಕನನ್ನು ಕೆಲಸಕ್ಕೆ ನೇಮಿಸಿಕೊಂಡ ಮನೆಯ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲು ಹಿರಿಯ ಕಾರ್ಮಿಕ ನಿರೀಕ್ಷಕ ಅಶೋಕ ಒಡೆಯರ ಕ್ರಮ ಕೈಗೊಂಡಿದ್ದಾರೆ.
ಕಾರ್ಯಾಚರಣೆಯ ತಂಡದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕ ಅಕ್ರಮ ಅಲ್ಲಾಪುರ, ಎಂ.ಎಚ್. ಬಾರವಲಿ, ಪುಷ್ಪಾ ವೈ ಶಾನವಾಡ್, ಬಸವರಾಜ ಪಂಚಾಕ್ಷರಿಮಠ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.