ಹುಬ್ಬಳ್ಳಿ: ಬಾಕಿ ಇರುವ ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್) ತಂತ್ರಾಂಶ ಲೋಪದೋಷಗಳನ್ನು ತಕ್ಷಣ ಸರಿಪಡಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ವಿದ್ಯಾನಗರದ ಕಿಮ್ಸ್ ಆಸ್ಪತ್ರೆ ಎದುರು ವಾಹನಗಳ ಸಂಚಾರ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಯುಯುಸಿಎಂಎಸ್ ತಂತ್ರಾಂಶದ ಲೋಪದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ)ಯಡಿ ಪ್ರಥಮ ವರ್ಷದ ಪದವಿ ಮುಗಿಸಿದವರು ಗೊಂದಲದಲ್ಲಿದ್ದಾರೆ. ಫಲಿತಾಂಶ ಸಹ ವಿಳಂಬವಾಗಿ ಬರುತ್ತಿರುವುದು ಮುಂದಿನ ಶೈಕ್ಷಣಿಕ ವರ್ಷಕ್ಕೆ ಸಮಸ್ಯೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಲವು ತಾಂತ್ರಿಕ ದೋಷಗಳಿಂದಾಗಿ ಎರಡು ವರ್ಷಗಳಿಂದ ಹಲವರಿಗೆ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ. ಪೂರ್ಣ ಪ್ರಮಾಣದಲ್ಲಿ ಕಾಲೇಜು ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳು, ಶೈಕ್ಷಣಿಕ ಇತರೆ ಚಟುವಟಿಕೆಗಳ ಖರ್ಚಿಗೆ ಪರದಾಡುವಂತಾಗಿದೆ. ಅಲ್ಲದೆ, ಕೆಲವು ಶೈಕ್ಷಣಿಕ ಸೌಲಭ್ಯಗಳಿಂದಲೂ ವಂಚಿತರಾಗುತ್ತಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ ಸರ್ಕಾರ ಸೂಕ್ತ ಕ್ರಮ ಕೈಗೊಂಡು, ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.
ಎಬಿವಿಪಿ ಹು–ಧಾ ಮಹಾನಗರ ಕಾರ್ಯದರ್ಶಿ ಶಿವಕುಮಾರ ಮಟ್ಟಿ, ಪೃಥ್ವಿ ಕುಮಾರ, ಹಿತೇಶ, ನಿಶಾ ಕಾಂಟೆ, ರಾಘವೇಂದ್ರ, ಶ್ರೇಯಾ, ಪ್ರೇಮಾ, ಪುಷ್ಪಾ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.