ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಅಜೆಂಡಾದಡಿ ಚುನಾವಣೆ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

Last Updated 16 ಅಕ್ಟೋಬರ್ 2022, 7:41 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕರ್ನಾಟಕದಲ್ಲಿ 2023 ವಿಧಾನಸಭಾ ಚುನಾವಣೆಯನ್ನು ಪಕ್ಷವು ಅಭಿವೃದ್ಧಿ ಅಜೆಂಡಾ ಹಾಗೂ ಡಬಲ್ ಎಂಜಿನ್ ಸರ್ಕಾರದ ಭರವಸೆಯೊಂದಿಗೆ ಎದುರಿಸಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಚುನಾವಣೆಗೆ ಅಭೂತಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಎಲ್ಲಾ ಕಡೆ ಬಿಜೆಪಿ‌ ಪರವಾದ ವಾತಾವರಣ ಇದ್ದು, ಪ್ರಧಾನಿ ನರೇಂದ್ರ ಮೋದಿ ಪರ ಮತ ಚಲಾಯಿಸಲು ಕರ್ನಾಟಕದ ಜನ ಸಿದ್ಧರಾಗಿದ್ದಾರೆ ಎಂದರು.

ಈಗಾಗಲೇ ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ ನಡೆದಿದೆ. ಹಲವು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಅದೇ ರೀತಿ ಕರ್ನಾಟಕದಲ್ಲಿ ಸಹ ಬಿಜೆಪಿ 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಜಯ ಸಾಧಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ 2013ರ ಇತಿಹಾಸ ನಿರ್ಮಾಣವಾಗುತ್ತೆ ಎನ್ನುವುದು ಆಧಾರರಹಿತ. ದೇಶದಲ್ಲಿ ಕಾಂಗ್ರೆಸ್ ಸೋಲಿನ ಅಲೆ ಆರಂಭವಾಗಿದೆ. ಬಿಜೆಪಿ ಗೆಲುವಿನ ಅಲೆ ಎದ್ದಿದೆ. ರಾಹುಲ್ ಗಾಂಧಿ ದೇಶದಲ್ಲಿ ಮಾಡುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ ಯಾವುದೇ ವಿಶೇಷವಿಲ್ಲ. ಸುಮ್ಮನೆ ಬೆಳಿಗ್ಗೆ ಮತ್ತು ಸಂಜೆ ವಾಕಿಂಗ್ ಮಾಡುತ್ತಿದ್ದಾರೆ. ಮಾತನಾಡಲು ಯಾವುದೇ ವಿಷಯಗಳಿಲ್ಲದ ಕಾರಣ, ಸುಮ್ಮನೆ ಬಿಜೆಪಿ ವಿರುದ್ಧ ಹಾರಿಕೆ ಟೀಕೆಗಳನ್ನು ಮಾಡುತ್ತಾ ಓಡಾಡುತ್ತಿದ್ದಾರೆ. ಇದು ಭಾರತ ಜೋಡೋ ಯಾತ್ರೆ ಅಲ್ಲ. ಡಿಕೆಶಿ ಮತ್ತು ಸಿದ್ದರಾಮಯ್ಯ ಜೋಡಿಸುವ ಜೋಡೋ ಯಾತ್ರೆ ಎಂದು ವ್ಯಂಗ್ಯವಾಡಿದರು.

ಬಸನಗೌಡ ಪಾಟೀಲ್ ಯತ್ನಾಳ ಪಕ್ಷದ ನಾಯಕ ಅಲ್ಲ, ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರು ಅಲ್ಲ. ಅವರ ಸ್ವಭಾವವೇ ಹಾಗೇ. ಅವರ ಹೇಳಿಕೆಗಳಿಗೆ ಹೆಚ್ಚು ಮಹತ್ವ ಕೊಡುವ ಅವಶ್ಯಕತೆ ಇಲ್ಲ. ಶಾಸಕ ಅರವಿಂದ ಬೆಲ್ಲದ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ತೆಗೆದು ಹಾಕಬೇಕೆಂಬ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಇಂತಹ ವಿಷಯಗಳ ಕುರಿತು, ಸಾಮೂಹಿಕ ನಾಯಕತ್ವದಲ್ಲಿ ಚರ್ಚೆ ನಡೆಯುತ್ತದೆ. ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿಕೊಂಡಿದ್ದಾರಷ್ಟೇ. ಇಂತಹ ಮಹತ್ವದ ವಿಚಾರಗಳ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತಿರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ನಮ್ಮದು ಸಬ್ ಕಾ ಸಾಥ್, ಸಬ್ ಕಾ ವಿಕಾಸ ಸರ್ಕಾರ. ಎಲ್ಲರ ಅಭಿವೃದ್ಧಿ ನಮ್ಮ ಧ್ಯೇಯವಾಗಿದೆ. ಶಾಸಕ ಜಗದೀಶ ಶೆಟ್ಟರ್ ಅವರು ನಮ್ಮ ಪಕ್ಕವೇ ಇದ್ದಾರೆ. ಅವರನ್ನು ಸೈಡ್ ಲೈನ್ ಮಾಡುವ ಪ್ರಶ್ನೆ ಇಲ್ಲ. ಶೆಟ್ಟರ್ ಅವರು, ಕಾರ್ಯಕಾರಿ ಹಾಗೂ ಚುನಾವಣಾ ಸಮಿತಿ ಸದಸ್ಯರಾಗಿದ್ದಾರೆ. ಸಮಯಕ್ಕೆ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಬಿಜೆಪಿ ಇತರ ಪಕ್ಷಗಳ ಹಾಗಲ್ಲ. ಜನರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದರು.

ಶೇ 40 ಕಮಿಷನ್ ಸರ್ಕಾರ ಎಂಬುದಕ್ಕೆ ಯಾವುದೇ ದಾಖಲೆಯಿಲ್ಲ. ಈ ಆರೋಪ ಕೇವಲ ಸ್ಟಂಟ್. ಕಮಿಷನ್ ಪಡೆದ ದಾಖಲೆಗಳು ಇದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ ಹಿಂದೆ ಹಿಂದೂಗಳ ಹತ್ಯೆ, ಪಿಎಫ್ಐ ಬೆಳವಣಿಗೆ, ಶಿಕ್ಷಕರ ನೇಮಕಾತಿ ಹಗರಣ... ಇವೆಲ್ಲವೂ ಕಾಂಗ್ರೆಸ್ ಸರ್ಕಾರ ಇದ್ದಾಗ ನಡೆದಿದೆ ಎಂದು ವಾಗ್ದಾಳಿ ನಡೆಸಿದರು.

ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕ ಜಗದೀಶ ಶೆಟ್ಟರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT