ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಹುಧಾ ಮಹಾನಗರ ಪಾಲಿಕೆ ಆಯುಕ್ತ ಡಾ. ಬಿ.ಗೋಪಾಲಕೃಷ್ಣ 76ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು, 'ಅನೇಕರ ತ್ಯಾಗ, ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಅವರನ್ನೆಲ್ಲ ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
'ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪಾಲಿಕೆ ವತಿಯಿಂದ ತಿರಂಗ ರ್ಯಾಲಿ, ಐದು ಕಿ.ಮೀ. ಗೋಡೆ ಬರಹದ ಮೂಲಕ ಜಾಗೃತಿ ಸಂದೇಶ, ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಗಿತ್ತು. ಪಾಲಿಕೆ ಕೇಂದ್ರ ಕಚೇರಿ ಎದುರು 75 ಅಡಿ ಎತ್ತರದ ಧ್ವಜಸ್ತಂಭ ನಿರ್ಮಿಸಲಾಗಿದೆ' ಎಂದರು.
'ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಇಡಿ ಬೀದಿದೀಪ ಅಳವಡಿಸುವ ಯೋಜನೆಗೆ ಸಮೀಕ್ಷೆ ಆರಂಭಿಸಲಾಗಿದೆ. ನಿರಂತರ ನೀರು ಪೂರೈಸುವ ಯೋಜನೆಯನ್ನು ಎಲ್ ಆ್ಯಂಡ್ ಡಿ ಕಂಪನಿಗೆ ಹಸ್ತಾಂತರಿಸಿದ್ದು, 2025ಕ್ಕೆ ಪಾಲಿಕೆಯ 82 ವಾರ್ಡ್'ಗಳಿಗೆ ಯೋಜನೆ ವಿಸ್ತರಿಸಲಾಗುವುದು. ಘನತ್ಯಾಜ್ಯ ನಿರ್ವಹಣೆ ಅಡಿಯಲ್ಲಿ ಯೋಜನೆ ಭೂಸಮೃದ್ಧಿ ಉಪ ಯೋಜನೆಯಡಿ 120 ಟನ್ ಗೊಬ್ಬರ ಮಾರಾಟ ಮಾಡಲಾಗಿದೆ. ಧಾರವಾಡದ ಶಿವಳ್ಳಿ ಗ್ರಾಮದಲ್ಲಿ ಕಟ್ಟಡ ತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ ಆರಂಭಿಸಲು ₹556 ಲಕ್ಷ ಅನುದಾನ ಬಿಡುಗಡೆಯಾಗಿದೆ. ಖಾಲಿ ನಿವೇಶನಗಳನ್ನು ಶುಚಿಗೊಳಿಸಿ ಅವುಗಳ ಮಾಲೀಕರಿಂದ ₹1.12 ಕೋಟಿ ಸಂಗ್ರಹ ಮಾಡಲಾಗಿದೆ. ಪಾಲಿಕೆ ಅಭಿವೃದ್ಧಿಯಲ್ಲಿ ಸಾರ್ವಜನಿಕರ, ಪೌರ ಕಾರ್ಮಿಕರ, ಅಧಿಕಾರಿಗಳ ಹಾಗೂ ಸಿಬ್ಬಂದಿ ಸಹಕಾರ ಅಮೂಲ್ಯವಾಗಿದೆ' ಎಂದರು.
ಉಪ ಮೇಯರ್ ಉಮಾ ಮುಕುಂದ, ಸದಸ್ಯರಾದ ನಿರಂಜನ ಹಿರೇಮಠ, ಶಿವು ಮೆಣಸಿನಕಾಯಿ, ರಾಜಣ್ಣ ಕೊರವಿ, ಡಿ.ಕೆ. ಚವ್ಹಾಣ್ ಸೇರಿದಂತೆ ಇತರೆ ಪಾಲಿಕೆ ಸದಸ್ಯರು ಮತ್ತು ಅಧಿಕಾರಿಗಳು ಇದ್ದರು.
75 ಅಡಿ ಎತ್ತರದ ಧ್ವಜ ಸ್ತಂಭಕ್ಕೆ ಧ್ವಜಾರೋಹಣ
ಹುಬ್ಬಳ್ಳಿ: ಸ್ವಾತಂತ್ರ್ಯ ಅಮೃತ ಮಹೋತ್ಸದ ಅಂಗವಾಗಿ ಹುಬ್ಬಳ್ಳಿಯ ಮಹಾನಗರ ಪಾಲಿಕೆ ಆವರಣದಲ್ಲಿ ಸ್ಥಾಪಿಸಲಾದ 75 ಅಡಿ ಎತ್ತರದ ಧ್ವಜಸ್ತಂಭವನ್ನು ಶಾಸಕ ಜಗದೀಶ ಶೆಟ್ಟರ್ ಉದ್ಘಾಟಿಸಿದರು. ಮೇಯರ್ ಈರೇಶ ಅಂಚಟಗೇರಿ ಧ್ವಜಾರೋಹಣ ನೆರವೇರಿಸಿದರು. ಆಯುಕ್ತ ಡಾ. ಬಿ. ಗೋಪಾಲಕೃಷ್ಣ, ಪಾಲಿಕೆ ಸದಸ್ಯರು ಮತ್ತು ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.