ಧಾರವಾಡ: ಶಿಕ್ಷಣ ಕ್ಷೇತ್ರದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಶಾಲಾ-ಕಾಲೇಜುಗಳ ನೂರಾರು ಶಿಕ್ಷಕರು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಉಪವಾಸ ಸತ್ಯಾಗ್ರಹ ಆರಂಭಿಸಿದರು.
ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಶಿಕ್ಷಕರು, ಅನುದಾನ ರಹಿತ ಶಾಲಾ-ಕಾಲೇಜುಗಳ ಶಿಕ್ಷಕರ ಸಮಸ್ಯೆಗಳ ನಿವಾರಣೆಗೆ ಹಲವು ಭಾರಿ ಒತ್ತಾಯಿಸಿದರೂ, ಸರ್ಕಾರ ಸ್ಪಂದಿಸಿಲ್ಲ ಎಂದು ದೂರಿದರು.
1995ರ ನಂತರ ಆರಂಭವಾದ ಕನ್ನಡ ಮಾಧ್ಯಮದ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವುದು, ಜ್ಯೋತಿ ಸಂಜೀವಿನಿ ಯೋಜನೆ ಅನುದಾನ ರಹಿತ ಶಿಕ್ಷಕರಿಗೂ ವಿಸ್ತರಿಸಲು, ಹೊರಟ್ಟಿ ನೇತೃತ್ವದ ಕಾಲ್ಪನಿಕ ವೇತನ ಸಮಿತಿ ವರದಿ ಜಾರಿ ಮಾಡುವಂತೆ ಆಗ್ರಹಿಸಿದರು.
ಉಪವಾಸ ಧರಣಿಗೆ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಖಾಸಗಿ ಶಿಕ್ಷಣ ಸಂಸ್ಥೆಗಳು, ಹುಬ್ಬಳ್ಳಿ ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೇಂದ್ರ ಸ್ವಾಮೀಜಿ, ಮಣಕವಾಡದ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಸತ್ಯಾಗ್ರಹದಲ್ಲಿ ಪಾಲ್ಗೊಂಡು ಬೆಂಬಲ ನೀಡಿದರು. ವಿವಿಧ ಶಿಕ್ಷಕ ಸಂಘಟನೆಗಳು ಬೆಂಬಲ ಸೂಚಿಸಿದವು.
ಜೆಡಿಎಸ್ ಮುಖಂಡ ಎನ್.ಎಚ್. ಕೋನರಡ್ಡಿ ಮಾತನಾಡಿ, 'ಉಪವಾಸ ಸತ್ಯಾಗ್ರಹ ಕೈಬಿಟ್ಟು ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡರೆ, ಬೆಂಗಳೂರು ಮುಟ್ಟುವುದರೊಳಗಾಗಿ ಆದೇಶ ಸಿಗಲಿದೆ' ಎಂದರು.'