ಧಾರವಾಡ: ‘ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನನ್ನನ್ನು ಬಿಜೆಪಿಯ ಅಧಿಕೃತ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ವಿಧಾನ ಪರಿಷತ್ ಸದಸ್ಯ ರವಿಕುಮಾರ ಅವರು ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ. ಶನಿವಾರ ಅಧಿಕೃತ ಘೋಷಣೆ ಹೊರಬೀಳಲಿದೆ’ ಎಂದು ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.
ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿಯಲ್ಲಿ ಅಧಿವೇಶನ ನಡೆಯುವಾಗ ಪ್ರತಿಭಟನೆ ಮಾಡುವುದು ಬೇಡ. ಅಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕು. ವಿನಾಕಾರಣ ಪ್ರತಿಭಟನೆಯಿಂದ ಚರ್ಚೆಗಳು ನಡೆಯಲ್ಲ’ ಎಂದರು.
‘ನಮ್ಮದು ಸಮಗ್ರ ಕರ್ನಾಟಕ, ಅದರಲ್ಲಿ ಎರಡು ಮಾತಿಲ್ಲ. ಆದರೆ, ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಸ್ಪಂದಿಸಲು ಸರ್ಕಾರ, ಸದಸ್ಯರು ಮುಂದಾಗಬೇಕು. ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಈ ಭಾಗದ ಸಮಸ್ಯೆ ಬಗ್ಗೆ ಚರ್ಚೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದರು.