ಹುಬ್ಬಳ್ಳಿ: ಹುಬ್ಬಳ್ಳಿ– ಧಾರವಾಡದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಸಮೀಕ್ಷೆ ಕಾರ್ಯ ಬುಧವಾರದಿಂದ ಆರಂಭವಾಗಿದ್ದು, ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಮಾಹಿತಿ ಕಲೆ ಹಾಕಲಾಗುತ್ತಿದೆ.
ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಅಧಿಕಾರಿಗಳ ಮಾರ್ಗದರ್ಶನದಲ್ಲಿ ಅವಳಿ ನಗರದ 14 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಮೀಕ್ಷೆ ಕೈಗೊಳ್ಳಲಾಗಿದೆ. ಹುಬ್ಬಳ್ಳಿ– ಧಾರವಾಡ ಪೊಲೀಸ್ ಕಮಿಷನರೇಟ್ ಸಿಬ್ಬಂದಿ ಮತ್ತು ಗುಪ್ತಚರ ದಳ ಸಿಬ್ಬಂದಿ ಜಂಟಿಯಾಗಿ ಸಮೀಕ್ಷೆ ನಡೆಸುತ್ತಿದ್ದಾರೆ.
‘ಬಾಂಗ್ಲಾದೇಶದಿಂದ ಬಂದ ನುಸುಳುಕೋರರು, ರೋಹಿಂಗ್ಯಾ ಮುಸಲ್ಮಾನರು ಹಾಗೂ ಪಾಕಿಸ್ತಾನ, ಅಫ್ಗಾನಿಸ್ತಾನಗಳಿಂದ ಬಂದ ಅಕ್ರಮ ವಲಸಿಗರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜೊತೆಗೆ, ಬಿಹಾರ ಮತ್ತು ಉತ್ತರ ಪ್ರದೇಶಗಳಿಂದ ಬಂದ ವಲಸಿಗರ ಆಧಾರ ಕಾರ್ಡ್ ಮತ್ತು ಭಾವಚಿತ್ರ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಐಎಸ್ಡಿ ಸಿಬ್ಬಂದಿಯೊಬ್ಬರು ತಿಳಿಸಿದರು.
ಬುಧವಾರ ಇಲ್ಲಿನ ಘಂಟಿಕೇರಿ, ಸಿಬಿಟಿ ಕಿಲ್ಲಾ, ಯಲ್ಲಾಪುರ ಓಣಿ, ಹಳೇಹುಬ್ಬಳ್ಳಿ, ಚನ್ನಪೇಟೆ, ಕೇಶ್ವಾಪುರ, ಬೆಂಗೇರಿ, ಅಯೋಧ್ಯಾ ನಗರ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿರುವ ಪೊಲೀಸರು, 200ಕ್ಕೂ ಹೆಚ್ಚು ಮಂದಿಯ ಮಾಹಿತಿ ಸಂಗ್ರಹಿಸಿದ್ದಾರೆ.
‘ಸರ್ಕಾರದ ಸೂಚನೆ ಮೇರೆಗೆ ಅಕ್ರಮವಾಗಿ ವಾಸವಾಗಿರುವ ವಲಸಿಗರ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದು ಪೊಲೀಸ್ ಕಮಿಷನರ್ ಆರ್. ದಿಲೀಪ್ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.