ಹುಬ್ಬಳ್ಳಿ: ಪಾಲಿಕೆಯಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದಾಗ ಅವಳಿ ನಗರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ. ಹೀಗಾಗಿ ಈ ಬಾರಿಯೂ ನಮ್ಮ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಬೂತ್ ಮಟ್ಟದಲ್ಲಿ ಪಕ್ಷದ ವತಿಯಿಂದ ಹಾಗೂ ಹಿತೈಷಿಗಳ ನೆರವಿನಿಂದ ಬಿಜೆಪಿ ತನ್ನ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದೆ. ರಾಜ್ಯ ಸರ್ಕಾರ ಜಾರಿಗೆ ತಂದ ಜನಪರ ಯೋಜನೆಗಳನ್ನು ಜನರಿಗೆ ತಿಳಿಸಿ ಮತ ಕೇಳಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಸರ್ಕಾರವಷ್ಟೇ ಅಲ್ಲ; ಪಕ್ಷದ ವತಿಯಿಂದಲೂ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದೇವೆ’ ಎಂದರು.
‘ಬಿಜೆಪಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನಾವೇ ಮಾಡಿದ್ದು ಎಂದು ಹೇಳಿಕೊಂಡು ಪೂರ್ವ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ, ಜನರಿಗೆ ಸತ್ಯ ಏನೆಂಬುದು ಗೊತ್ತಿದೆ’ ಎಂದರು.
ದಾವಣಗೆರೆಯ ಮಾಜಿ ಮೇಯರ್ ಸುಧಾಜಯ ರುದ್ರೇಶ್, ಬಿಜೆಪಿ ಮುಖಂಡರಾದ ದತ್ತಮೂರ್ತಿ ಕುಲಕರ್ಣಿ ಹಾಗೂ ರವಿ ನಾಯ್ಕ ಪಾಲ್ಗೊಂಡಿದ್ದರು.