ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವ ವಿಷಯ ಕುರಿತು ಪಾಲಿಕೆ ಸದನ ಸಮಿತಿ ಅಂತಿಮ ವರದಿ ಸಲ್ಲಿಸಲು ಕೆಲವೇ ನಿಮಿಷಗಳು ಬಾಕಿಯಿದ್ದು, ಸಾರ್ವಜನಿಕರಲ್ಲಿ ಕುತೂಹಲ ಹೆಚ್ಚಿಸಿದೆ.
ಪಾಲಿಕೆ ಆವರಣದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರ ಸಶಸ್ತ್ರ ಮೀಸಲು ಪಡೆ ತುಕಡಿಯನ್ಜು ನಿಯೋಜಿಸಲಾಗಿದೆ.
ಇದರ ನಡುವೆಯೇ ಸ್ಥಳೀಯ ಬಿಜೆಪಿ ಮುಖಂಡರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಿವಾಸದಲ್ಲಿ, ಗೋಪ್ಯ ಸಭೆ ನಡೆಸುತ್ತಿದ್ದಾರೆ. ಮೇಯರ್ ಈರೇಶ ಅಂಚಟಗೇರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದಾರೆ.
'ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಬಿಜೆಪಿ ಆಂತರಿಕ ಸಭೆ ನಡೆಯುತ್ತಿದೆ' ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದಕ್ಕೂ ಮೊದಲು ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಸಿಇಒ ಸುರೇಶ ಇಟ್ನಾಳ, ಆಯುಕ್ತ ಡಾ. ಬಿ. ಗೋಪಾಲಕೃಷ್ಣ, ಕಮಿಷನರ್ ಲಾಭೂರಾಮ್ ಜೊತೆ ಸಚಿವ ಜೋಶಿ ಸಭೆ ನಡೆಸಿದರು.