ಹುಬ್ಬಳ್ಳಿ: ‘ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಕೆಲಸಗಳಾಗಿಲ್ಲ ಎಂದು ಹೇಳಲು ಯಾರಿಗೂ ಸಾಧ್ಯವಿಲ್ಲ. ವಿರೋಧ ಪಕ್ಷದವರಿಗೂ ಕೂಡ ಸಾಧ್ಯವಿಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಕುಂದಗೋಳ ತಾಲ್ಲೂಕಿನ ಬಿಜೆಪಿ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.
ಅಲ್ಪಸಂಖ್ಯಾತರ ತುಷ್ಟೀಕರಣದಲ್ಲಿ ತೊಡಗಿರುವ ಕಾಂಗ್ರೆಸ್ ಸಹಜವಾಗಿ ನಮ್ಮ ವಿರೋಧಿಸುತ್ತದೆ. ಇದನ್ನು ಬಿಟ್ಟರೆ ಬೇರೆ ಯಾವ ವಿಷಯಗಳೂ ಕಾಂಗ್ರೆಸ್ ಬಳಿ ಇಲ್ಲ ಎಂದರು.
ಪಕ್ಷದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಪ್ರತಿಯೊಬ್ಬ ಮತದಾರನ ಮನೆಗೆ ತೆರಳಿ ಪ್ರಚಾರ ನಡೆಸಬೇಕು. ಬೂತ್ ಮಟ್ಟದಲ್ಲಿ ಎಲ್ಲ ಜಾತಿ, ವರ್ಗದ ಪ್ರಮುಖರ ಸಭೆ ನಡೆಸಿ, ಅವರಿಗೂ ಮನದಟ್ಟ ಮಾಡಿಕೊಡಬೇಕು ಎಂದು ಹೇಳಿದರು.
ಕುಂದಗೋಳ ಶಾಸಕ ಎಂ.ಆರ್. ಪಾಟೀಲ ಮಾತನಾಡಿ, ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಲ್ಲದಿದ್ದರೂ ಜೋಶಿ ಅವರ ಪ್ರಯತ್ನದಿಂದ ಕ್ಷೇತ್ರದಲ್ಲಿ ಕೋಟ್ಯಾಂತರ ರೂಪಾಯಿ ಮೊತ್ತದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ’ ಎಂದರು.
ಕುಂದಗೋಳ ವಿಧಾನಸಭಾ ಕ್ಷೇತ್ರದ ಪ್ರಭಾರಿ ಶಶಿವೌಳಿ ಕುಲಕರ್ಣಿ, ಧಾರವಾಡ ಜಿಲ್ಲಾ ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷ ಲಿಂಗಪ್ಪ ಸುತಗಟ್ಟಿ, ರವಿಗೌಡ ಪಾಟೀಲ, ಮಹಾಂತೇಶ ಶ್ಯಾಗೋಟಿ, ಶಿವಾ ಹಿರೇಗೌಡರ, ಡಿ.ವೈ. ಲಕ್ಕಣ್ಣಗೌಡರ, ಭರಮಪ್ಪ ದ್ಯಾಮನಗೌಡರ, ಯಲ್ಲಮ್ಮ ಗಾಣಿಗೇರ, ಇದ್ದರು.