ಹುಬ್ಬಳ್ಳಿ: ಚನ್ನಮ್ಮ ವೃತ್ತದಲ್ಲಿ ಸೇತುವೆ ನಿರ್ಮಾಣಕ್ಕೆ ಶೀಘ್ರ ಟೆಂಡರ್ ಕರೆಯಲು ಅಧಿಕಾರಿಗಳಿಗೆ ಸೂಚಿಸುವಂತೆ ಕೇಂದ್ರ ಸಾರಿಗೆ, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದೇನೆ ಎಂದು ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಇಲ್ಲಿನ ಮಂತ್ರ ರೆಸಿಡೆನ್ಸಿಯಲ್ಲಿ ಆಯೋಜಿಸಿದ್ದ ಪಕ್ಷದ ವಿಶೇಷ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸೇತುವೆ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ದೊರೆತಿದೆ. ನಾಲ್ಕು ದಿನದ ಹಿಂದೆ ಗಡ್ಕರಿ ಅವರನ್ನು ಭೇಟಿ ಕಾಮಗಾರಿ ಸಂಬಂಧ ಚರ್ಚಿಸಲಾಗಿದೆ ಎಂದರು.
ರಾಸುಗಳ ಕಾಲುಬಾಯಿ ರೋಗಕ್ಕೆ ಔಷಧಿ ಹಾಗೂ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವೇ ಶೇ 100 ರಷ್ಟು ಅನುದಾನ ನೀಡಲು ತೀರ್ಮಾನಿಸಲಾಗಿದೆ. ಜತೆಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷಿ ನಾಶ ಮಾಡುವ ಪ್ರಯತ್ನದ ವಿಡಿಯೋಗಳು ಹೊರಬಂದಿವೆ. ಜತೆಗೆ ಆ ಕುಟುಂಬದ ಒತ್ತಾಯದ ಮೇರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.