ಧಾರವಾಡ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದಶ್ವಾಸಕೋಶ ಸರಿಯಾಗಿದೆ. ಸರ್ಕಾರ ಸಹಜವಾಗಿ ಉಸಿರಾಡುತ್ತಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾರ್ಮಿಕವಾಗಿ ನುಡಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟವಿಲ್ಲ. ಸುತ್ತೂರು ಶ್ರೀಗಳ ತಾಯಿ ನಿಧನರಾದ ಕಾರಣ ಅವರನ್ನು ಭೇಟಿಯಾಗಲು ರಾಜಕಾರಣಿಗಳು ಹೋಗಿದ್ದು ತಪ್ಪಾ? ಎಲ್ಲವನ್ನೂ ರಾಜಕೀಯ ಎಂದರೆ ಹೇಗೆ’ ಎಂದು ಪ್ರಶ್ನಿಸಿದರು.
‘ಪರೀಕ್ಷೆ ಫಲಿತಾಂಶಕ್ಕೆ ಕಾಯುತ್ತಿದ್ದೇವೆ’ ಎಂಬ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಸಿದ ಅವರು, ‘ಯೋಗೇಶ್ವರ್ ಅವರು ಯಾವ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಬರೆದಿದ್ದಾರೆಯೋ ಅದರ ಕುಲಪತಿ ಅರುಣ್ ಸಿಂಗ್ ಈಗಾಗಲೇ ಉತ್ತರ ಕೊಟ್ಟಿದ್ದಾರೆ’ ಎಂದು ತಿರುಗೇಟು ನೀಡಿದರು.
‘ಕೇಂದ್ರದ ಸಚಿವ ಸಂಪುಟ ವಿಸ್ತರಣೆ ವಿಚಾರ ಮಾಧ್ಯಮಗಳ ಸೃಷ್ಟಿ. ಆ ಬಗ್ಗೆ ಪ್ರಧಾನಿ ತೀರ್ಮಾನ ಕೈಗೊಳ್ಳುತ್ತಾರೆ. ಯಾರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಯಾರನ್ನು ಬಿಡಬೇಕು ಅವರಿಗೆ ಗೊತ್ತು. ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ’ ಎಂದರು.