ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿಯಿಂದ ಸ್ಪರ್ಧಿಸಲು ತೀರ್ಮಾನಿಸಿಲ್ಲ: ಶೆಟ್ಟರ್‌

Published 14 ಮಾರ್ಚ್ 2024, 14:52 IST
Last Updated 14 ಮಾರ್ಚ್ 2024, 14:52 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಹಂಚಿಕೆ ಬಗ್ಗೆ ಪಕ್ಷದ ವರಿಷ್ಠರು ನನ್ನೊಂದಿಗೆ ಮಾತನಾಡಿದ್ದಾರೆ. ಪಕ್ಷದ ವರಿಷ್ಠರು ಹಾಗೂ ಬೆಳಗಾವಿ ಮುಖಂಡರ ಜೊತೆ ಚರ್ಚಿಸಿದ ಬಳಿಕ ಅಂತಿಮ ನಿರ್ಣಯ ಕೈಗೊಳ್ಳುವೆ’ ಎಂದು ಬಿಜೆಪಿ ಮುಖಂಡ ಜಗದೀಶ ಶೆಟ್ಟರ್‌ ಹೇಳಿದರು.

‘ಧಾರವಾಡ, ಹಾವೇರಿ ಕ್ಷೇತ್ರದ ಬಗ್ಗೆ ಚರ್ಚೆಯಾದಾಗ, ಆಸಕ್ತಿ ಇದೆ ಎಂದು ಹೇಳಿದ್ದೆ. ಈಗ ಇವೆರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಅದರ ಬಗ್ಗೆ ಚರ್ಚಿಸಲ್ಲ’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಆಗಿಸುವುದು ನಮ್ಮ ಗುರಿ. ಇದರ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಯಾರೇ ಅಭ್ಯರ್ಥಿಯಾದರೂ ಅವರ ಗೆಲುವಿಗೆ ಪ್ರಯತ್ನಿಸುವೆ. ಪ್ರಚಾರ ಮಾಡುವೆ’ ಎಂದರು.

‘ಪಕ್ಷಕ್ಕೆ ಮರು ಸೇರ್ಪಡೆಯಾದ ಸಂದರ್ಭದಲ್ಲಿ ಬಿ.ಎಸ್‌. ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಜೊತೆ ನಡೆದ ಚರ್ಚೆಯನ್ನು ಬಹಿರಂಗ ಪಡಿಸಲು ಆಗದು’ ಎಂದರು.

ಬೆಳಗಾವಿಯಲ್ಲಿ ‘ಗೋ ಬ್ಯಾಕ್‌ ಶೆಟ್ಟರ್‌’  ಅಭಿಯಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈ ರೀತಿಯ ಅಭಿಪ್ರಾಯ ಕೆಲವರು  ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ವಿ.ಸೋಮಣ್ಣ ವಿರುದ್ಧ ಕೆಲ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದರು. ಆದರೂ, ಪಕ್ಷದ ವರಿಷ್ಠರು ಸೋಮಣ್ಣ ಅವರಿಗೆ ಟಿಕೆಟ್‌ ನೀಡಿದ್ದಾರೆ ಅಲ್ಲವೇ‌?’ ಎಂದರು.

‘ಜಗದೀಶ ಶೆಟ್ಟರ್ ಅವರಿಗೆ ಪಶ್ಚಾತ್ತಾಪ ಆಗಲಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್‌ಗೆ ಹೋದಾಗಷ್ಟೇ ಅಲ್ಲ, ಅಲ್ಲಿಂದ ಮರಳಿದಾಗಲೂ ಪಶ್ಚಾತ್ತಾಪ ಪಟ್ಟಿಲ್ಲ. ಅಂಥ ವ್ಯಕ್ತಿ ನಾನಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT