ಹುಬ್ಬಳ್ಳಿ: ‘ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿರುವ ಐದು ಕೆ.ಜಿ. ಅಕ್ಕಿಯಲ್ಲಿಯೇ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ’ ಎಂದು ಶಾಸಕ ಅರವಿಂದ ಬೆಲ್ಲದ ಲೇವಡಿ ಮಾಡಿದರು.
ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ರಾಜ್ಯಕ್ಕೆ ಐದು ಕೆ.ಜಿ. ಅಕ್ಕಿ ನೀಡುವ ಬದಲು, ಅರ್ಹ ಪಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಬೇಕು. ಹಾಗೆ ಮಾಡಿದರೆ, ಜನರಿಗೆ ಯಾರು ಎಷ್ಟು ಅಕ್ಕಿ ಕೊಡುತ್ತಾರೆ ಎನ್ನುವುದು ಗೊತ್ತಾಗುತ್ತದೆ’ ಎಂದರು.
‘ಜನರು ಕೇವಲ ಅಕ್ಕಿ ಮಾತ್ರ ತಿನ್ನುವುದಿಲ್ಲ. ಒಬ್ಬರಿಗೆ ತಿಂಗಳಿಗೆ 10 ಕೆ.ಜಿ. ಅಕ್ಕಿ ಹೆಚ್ಚಾಗುತ್ತದೆ. ಕೇಂದ್ರ ಸರ್ಕಾರ ನೀಡುವ ಫಲಾನುಭವಿಗಳಿಗೆ ಹಣ ವರ್ಗಾಯಿಸಿದರೆ, ಅವರು ದೈನಂದಿನ ಜೀವನಕ್ಕೆ ಬೇಕಾದ ಜೋಳ, ರಾಗಿಗಳಂಥ ಧಾನ್ಯಗಳನ್ನು ಖರೀದಿಸುತ್ತಾರೆ. ಆಗ ಜನರಿಗೆ ಕಾಂಗ್ರೆಸ್ನ ಗ್ಯಾರಂಟಿ ಬಗ್ಗೆ ಅರಿವಾಗುತ್ತದೆ. ಈ ಕುರಿತು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ’ ಎಂದು ಹೇಳಿದರು.
‘ವಿರೋಧ ಪಕ್ಷ ನಾಯಕನ ಆಯ್ಕೆ ಪಕ್ಷಕ್ಕೆ ಬಿಟ್ಟ ವಿಚಾರ. ನನಗೆ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ. ಸದ್ಯ ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ’ ಎಂದರು.