ಹುಬ್ಬಳ್ಳಿ: ಸಂವಿಧಾನ ಜಾಗೃತಿ ಜಾಥಾ ಅಭಿಯಾನದ ಪ್ರಯುಕ್ತ ಧಾರವಾಡ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ‘ಪಾರಂಪರಿಕ ನಡಿಗೆ’ ಹಾಗೂ ‘ಪಂಜಿನ ಮೆರವಣಿಗೆ‘ ಕಾರ್ಯಕ್ರಮ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ (ಐಬಿಆರ್)ಗೆ ಸೇರ್ಪಡೆಯಾಗಿದೆ.
ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಐಬಿಆರ್ ನಿರ್ಣಾಯಕ ನರವಿಜಯ ಯಾದವ್ ಅವರು ಜಿಲ್ಲಾಧಿಕಾರಿ ದಿವ್ಯಾಪ್ರಭು ಮತ್ತು ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರಿಗೆ ಪ್ರಮಾಣಪತ್ರ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕ ಪ್ರಸಾದ ಅಬ್ಬಯ್ಯ ಉಪಸ್ಥಿತರಿದ್ದರು.
ದಿವ್ಯಾ ಪ್ರಭು ಮಾತನಾಡಿ, ‘ಫೆಬ್ರುವರಿ 17ರಂದು ಧಾರವಾಡದಲ್ಲಿ ಹಮ್ಮಿಕೊಂಡಿದ್ದ ಪಾರಂಪರಿಕ ನಡಿಗೆಯಲ್ಲಿ 25 ಸಾವಿರಕ್ಕೂ ಹೆಚ್ಚು ಮಂದಿ, ಫೆಬ್ರುವರಿ 19ರಂದು ಹುಬ್ಬಳ್ಳಿಯಲ್ಲಿ ನಡೆದ ಪಂಜಿನ ಮೆರವಣಿಗೆಯಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು‘ ಎಂದು ತಿಳಿಸಿದರು.
ಸಂವಿಧಾನ ಕುರಿತು ಅರಿವು ಮೂಡಿಸಲು ರಾಜ್ಯ ಸರ್ಕಾರ ಜನವರಿ 26ರಿಂದ ಪ್ರತಿ ಜಿಲ್ಲೆಯಲ್ಲಿ ಜಾಗೃತಿ ಜಾಥಾ ಆಯೋಜಿಸಲು ಸೂಚಿಸಿತ್ತು.