ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕಂಡು ಬಂದಿದ್ದ ಕೋವಿಡ್-19 ರೋಗಿಯ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಹಲವು ದಿನಗಳ ಚಿಕಿತ್ಸೆಯ ನಂತರ ರೋಗಿಯ ಗಂಟಲು ದ್ರವ ಮತ್ತು ರಕ್ತದ ಮಾದರಿಯನ್ನು ಪರೀಕ್ಷೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿಯು ನೆಗೆಟಿವ್ ಬಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಚಿಕಿತ್ಸೆಯ ನಂತರ ಕೊವಿಡ್-19 ಪಾಸಿಟಿವ್ ರೋಗಿಯ ಮೊದಲ ವರದಿಯು ನೆಗೆಟಿವ್ ಬಂದಿದೆ. ಎರಡನೇ ವರದಿಗೆ ನೀರಿಕ್ಷಿಸಲಾಗುತ್ತಿದೆ ಎಂದರು.
ಕೋವಿಡ್-19 ವರದಿ ನೆಗೆಟಿವ್ ಬಂದಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ರೋಗಿಯನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗುವುದು ಎಂದರು.