ಹುಬ್ಬಳ್ಳಿ: ಕಳಸಾ– ಬಂಡೂರಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶೀಘ್ರ ಪರವಾನಗಿ ನೀಡಬೇಕು ಎಂದು ಒತ್ತಾಯಿಸಿ ರೈತ ಸೇನಾ ಕರ್ನಾಟಕದ ನರಗುಂದ ಘಟಕದ ವತಿಯಿಂದ ಜ.29ರಂದು ಬೆಳಿಗ್ಗೆ 11.30ಕ್ಕೆ ಇಲ್ಲಿನ ಮೂರುಸಾವಿರ ಮಠದಿಂದ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸೇನಾ ಕರ್ನಾಟಕದ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ತಿಳಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಪಾದಯಾತ್ರೆಯಲ್ಲಿ ಸಾಗಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಗುವುದು. ಇದು ಕುಡಿಯುವ ನೀರಿಗಾಗಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮವಾಗಿದ್ದು, ಜಾತಿ, ಧರ್ಮಗಳನ್ನು ಮೀರಿ ಎಲ್ಲರೂ ಪಾದಯಾತ್ರೆಯ ಯಶಸ್ಸಿಗೆ ಕೈಜೋಡಿಸಬೇಕು’ ಎಂದರು.
‘ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ನಗರದಲ್ಲಿ ಹೆಚ್ಚಾಗಲಿದ್ದು, ಕಳಸಾ– ಬಂಡೂರಿ ಕಾಮಗಾರಿ ಆರಂಭಿಸಿ ನೀರಿನ ಸಮಸ್ಯೆ ಪರಿಹರಿಸಿದರೆ ಜನರಿಗೆ ಅನುಕೂಲ ಆಗಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೀಘ್ರ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು. ಸಮಸ್ಯೆಗೆ ಸ್ಪಂದಿಸಲು ಸರ್ಕಾರಗಳಿಗೆ ಎಂಟು ದಿನಗಳ ಗಡುವು ನೀಡಲಾಗುವುದು’ ಎಂದರು.
‘ಪಾದಯಾತ್ರೆಯಲ್ಲಿ 300ಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದು, 60 ಸಂಘಟನೆಗಳು ಬೆಂಬಲ ಸೂಚಿಸಿವೆ’ ಎಂದು ತಿಳಿಸಿದರು.
ಉತ್ತರ ಕರ್ನಾಟಕ ಅಟೊ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ, ನಾಗರಾಜ, ಹನುಮಂತ ಪವಾಡಿ ಇದ್ದರು.