ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗಡಿ ಪತ್ನಿ ಬದಲು ಮಕ್ಕಳಿಗೆ ಟಿಕೆಟ್ ನೀಡಲು ಒತ್ತಾಯ

ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆ, ನಳೀನ್ ಕುಮಾರ ಕಟೀಲ್‌ ಭಾಗಿ
Last Updated 28 ಅಕ್ಟೋಬರ್ 2020, 10:47 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ದಿವಂಗತ ಸುರೇಶ ಅಂಗಡಿ ಪತ್ನಿ ಬದಲು ಪುತ್ರಿಯರಿಗೆ ಟಿಕೆಟ್‌ ನೀಡಬೇಕು ಎಂದು ಬೆಳಗಾವಿಯ ಕೆಲ ಬಿಜೆಪಿ ನಾಯಕರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮುಂದೆ ಬೇಡಿಕೆ ಇಟ್ಟಿದ್ದಾರೆ.

ನಗರದಲ್ಲಿ ಮಂಗಳವಾರ ರಾತ್ರಿ ನಡೆದ ಸಭೆಯಲ್ಲಿ ಈ‌ ಬೇಡಿಕೆ ವ್ಯಕ್ತವಾಯಿತು. ಅಂಗಡಿ ಅವರ ಪತ್ನಿ ಮಂಗಳಾ ಅವರಿಗೆ ಒಂದು ಅವಧಿಗೆ ಟಿಕೆಟ್‌ ನೀಡುವುದು, ಮುಂದಿನ ಅವಧಿಗೆ ಮತ್ತೊಬ್ಬರನ್ನು ಆಯ್ಕೆ ಮಾಡುವುದು ಬೇಡ. ವಯಸ್ಸಿನ ಕಾರಣವೂ ಸಮಸ್ಯೆಯಾಗಬಹುದು. ಆದ್ದರಿಂದ ಪುತ್ರಿಯರಿಗೆ ಟಿಕೆಟ್‌ ನೀಡಬೇಕು ಎಂದು ಬಿಜೆಪಿ ಪ್ರಮುಖರು ಕೇಳಿದ್ದಾರೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರೊಬ್ಬರು ತಿಳಿಸಿದರು.

ಬುಧವಾರ ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಜಗದೀಶ ಶೆಟ್ಟರ್‌ ಮತ್ತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇದನ್ನು ತಳ್ಳಿ ಹಾಕಿದರು.

ಶೆಟ್ಟರ್‌ ‘ಬೆಳಗಾವಿ ಜಿಲ್ಲೆಯ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಲಾಗಿದೆ. ಮಸ್ಕಿ ವಿಧಾನಸಭೆ ಮತ್ತು ಬೆಳಗಾವಿ ಲೋಕಸಭಾ ಚುನಾವಣೆ ಇನ್ನು ಘೋಷಣೆಯಾಗಿಲ್ಲ. ಇದರ ಬಗ್ಗೆ ಚರ್ಚೆಯೂ ನಡೆದಿಲ್ಲ. ಬೆಳಗಾವಿಯಲ್ಲಿ ಪ್ರಮುಖ ನಾಯಕರಲ್ಲಿ ಕೆಲ ಗೊಂದಲಗಳಿದ್ದವು. ಅವುಗಳ ಬಗ್ಗೆ ರಾಜ್ಯ ಘಟಕದ ಅಧ್ಯಕ್ಷರು ಮಾತನಾಡಿದ್ದಾರೆ’ ಎಂದರು.

‘ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ ಬಗ್ಗೆ ಯಾವುದೇ ಗೊಂದಲವಿಲ್ಲ. ನಾವೆಲ್ಲರೂ ಸಂಘಟನಾತ್ಮಕವಾಗಿ ಕೆಲಸ ಮಾಡುತ್ತೇವೆ’ ಎಂದರು.

ಅಂಗಡಿ ಕುಟುಂಬದವರಿಗೆ ಟಿಕೆಟ್‌ ಕೊಟ್ಟರೆ ಅವರ ಪರ ಪ್ರಚಾರ ಮಾಡುವುದಾಗಿ ಕಾಂಗ್ರೆಸ್‌ ಮುಖಂಡ ಪ್ರಕಾಶ ಹುಕ್ಕೇರಿ ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿ ‘ಬೆಂಬಲ ಕೊಡುವುದಾದರೆ ಕೊಡಲಿ. ಯಾರೂ ಬೇಡ ಎನ್ನುವುದಿಲ್ಲ’ ಎಂದರು.

ಪ್ರಲ್ಹಾದ ಜೋಶಿ ಮಾತನಾಡಿ ‘ಸಭೆಯಲ್ಲಿ ಮಸ್ಕಿ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಗೆ ಬಿಜೆಪಿ ಪ್ರಮುಖರಲ್ಲಿ ಹೆಚ್ಚು ಆಕಾಂಕ್ಷಿಗಳಿದ್ದರು. ನಮ್ಮ ನಡುವೆಯೇ ಸ್ಪರ್ಧೆ ಇರುವುದು ಬೇಡ ಎನ್ನುವ ಕಾರಣಕ್ಕೆ ಕಟೀಲ್‌ ಬಂದು ಪ್ರಮುಖರ ಜೊತೆ ಚರ್ಚಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಚರ್ಚೆಯಾಗಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT