ಹುಬ್ಬಳ್ಳಿ: ಹೊಸ ಶಿಕ್ಷಣ ನೀತಿ (ಎನ್ಇಪಿ)ಯಲ್ಲಿ ಅನೇಕ ಲೋಪದೋಷಗಳಿದ್ದು, ಸರ್ಕಾರ ಇವುಗಳನ್ನು ಸರಿಪಡಿಸಿ ಬೇರೆ ಶಿಕ್ಷಣ ನೀತಿ ಜಾರಿಗೆ ತರಬೇಕು. ವಿದ್ಯಾರ್ಥಿಗಳಿಗೆ ಅದು ಅನುಕೂಲಕರವಾಗಿರಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ ಆಗ್ರಹಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಎನ್ಇಪಿಯಲ್ಲಿರುವ ಸಮಸ್ಯೆಗಳ ಬಗ್ಗೆ ಸರ್ಕಾರ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ತಜ್ಞರ ಜೊತೆ ಮುಕ್ತವಾಗಿ ಚರ್ಚಿಸಬೇಕು. ಶಿಕ್ಷಣ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಉದ್ದೇಶಕ್ಕಾಗಿಯೇ ಹೊಸ ನೀತಿ ಜಾರಿಯ ಹುನ್ನಾರ ನಡೆಸಲಾಗುತ್ತಿದೆ. ಇದರಿಂದಾಗಿ ವಿಶ್ವವಿದ್ಯಾಲಯಗಳು ಮಹತ್ವ ಕಳೆದುಕೊಳ್ಳುತ್ತವೆ’ ಎಂದು ಆತಂಕ ವ್ಯಕ್ತಪಡಿಸಿದರು.
‘17 ಜಿಲ್ಲೆಗಳಿಗೆ ಭೇಟಿ ನೀಡಿ ಎನ್ಇಪಿ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಒಕ್ಕೂಟದ ಕಾರ್ಯದರ್ಶಿ ಭರತರಾಮ, ವಿನಾಯಕ ಗೋಡಕೆ, ಅಬ್ದುಲ್ ಸನ್ಮಾನ, ವಿನಾಯಕ ಶಿರೂರ, ರಫೀಕ್ ಅಲಿ ಪಾಲ್ಗೊಂಡಿದ್ದರು.