ಧಾರವಾಡ: ಕೋವಿಡ್ ಲಸಿಕೆ ಪೂರ್ವಾಭ್ಯಾಸಕ್ಕೆಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಶುಕ್ರವಾರ ಚಾಲನೆ ನೀಡಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಬೆಳಿಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವ ಮೂಲಕ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಲಸಿಕೆ ಪೂರ್ವಾಭ್ಯಾಸ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
ಲಸಿಕೆ ನೀಡಲು ಸ್ಥಾಪಿಸಲಾಗಿರುವ ಕೇಂದ್ರ, ಪ್ರವೇಶ ಮತ್ತು ನೋಂದಣಿ ಕೊಠಡಿ, ಲಸಿಕಾ ಕೊಠಡಿ ಹಾಗೂ ನಿಗಾ ಕೊಠಡಿಗಳನ್ನು ಪರಿಶೀಲಿಸಿದ ಅವರು, ಕೊವಿನ್ ತಂತ್ರಾಂಶದಲ್ಲಿ ನೋಂದಣಿ ಮಾಡುವ ಕ್ರಮ, ಲಸಿಕೆಯ ಸಂಗ್ರಹ, ಸಾಗಣೆ, ಡಿ-ಫ್ರೀಜ್ ಕಾರ್ಯಕ್ಕೆ ಮಾಡಿಕೊಂಡಿರುವ ಸಿದ್ಧತೆಗಳು ಹಾಗೂ ತಾಲೀಮು ಕಾರ್ಯ ವೀಕ್ಷಿಸಿದರು.
ಧಾರವಾಡ ಜಿಲ್ಲೆಯಲ್ಲಿ ಎಂಟು ಆಸ್ಪತ್ರೆಗಳಲ್ಲಿ ಇಂದು ಲಸಿಕಾ ಪ್ರಯೋಗ ನಡೆಸಲಾಗುತ್ತಿದೆ. ಮುಂದೆ ಮೊದಲ ಹಂತದಲ್ಲಿ 22 ಸಾವಿರ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ವಾರಿಯರ್ಸ್ಗಳಿಗೆ ಲಸಿಕೆ ನೀಡಲು 110 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ . ಈಗಾಗಲೇ ಖಾಸಗಿ ಆಸ್ಪತ್ರೆಗಳ ಸಭೆ ನಡೆಸಿ ಅಲ್ಲಿನ ಎಲ್ಲಾ ಸಿಬ್ಬಂದಿ ವರ್ಗದ ಮಾಹಿತಿ ಸಂಗ್ರಹಿಸಲಾಗಿದೆ. ಇನ್ನೂ ಹೆಸರುಗಳಿದ್ದರೆ ಮಾಹಿತಿ ನೀಡಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ. ಎಸ್.ಎಂ. ಹೊನಕೇರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಕುಮಾರ್ ಮಾನಕರ್, ತಾಲೂಕು ಆರೋಗ್ಯಾಧಿಕಾರಿ ಡಾ.ತನುಜಾ ಇದ್ದರು.
ಪುರೋಹಿತನಗರ ಆರೋಗ್ಯ ಕೇಂದ್ರಕ್ಕೆ ಭೇಟಿ
ನಂತರ ಜಿಲ್ಲಾಧಿಕಾರಿಗಳು ಕಲಘಟಗಿ ರಸ್ತೆಯ ಪುರೋಹಿತ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಲಸಿಕಾ ತಾಲೀಮು ಪರಿಶೀಲಿಸಿದರು. ಡಾ.ಪರಶುರಾಮ ಇದ್ದರು.