ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಸದಿದ್ದರೆ ಮತ್ತೆ ಹೋರಾಟ: ಕೂಡಲಸಂಗಮ ಪೀಠದ ಸ್ವಾಮೀಜಿ ಎಚ್ಚರಿಕೆ

ಪಂಚಮಸಾಲಿ ಮೀಸಲಾತಿ: ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ
Last Updated 12 ಆಗಸ್ಟ್ 2021, 11:46 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬೇಡಿಕೆಯನ್ನು ಆರು ತಿಂಗಳೊಳಗೆ ಈಡೇರಿಸುವುದಾಗಿ ರಾಜ್ಯ ಸರ್ಕಾರ ನೀಡಿದ್ದ ಗಡುವು, ಸೆಪ್ಟೆಂಬರ್ 15ಕ್ಕೆ ಮುಗಿಯಲಿದೆ. ಅಷ್ಟರೊಳಗೆ ಮಾತು ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಮತ್ತೆ ಧರಣಿ ಆರಂಭಿಸಲಾಗುವುದು’ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಮೀಸಲಾತಿ ಹೋರಾಟ ಕುರಿತು ಹುಬ್ಬಳ್ಳಿಯಲ್ಲಿ ಗುರುವಾರ ನಡೆದ ಚಳವಳಿಗಾರರ ದುಂಡು ಮೇಜಿನ ಸಭೆಯ ನಿರ್ಣಯಗಳನ್ನು ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡ ಅವರು, ‘ಸರ್ಕಾರ ಕೊಟ್ಟಿದ್ದ ಮಾತನ್ನು ನೆನಪಿಸುವುದಕ್ಕಾಗಿ ರಾಜ್ಯದಾದ್ಯಂತಆ. 26ರಿಂದ ಸೆ. 30ರವರೆಗೆ ‘ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್’ ಅಭಿಯಾನ ಹಮ್ಮಿಕೊಳ್ಳಲಾಗುವುದು’ ಎಂದರು.

‘ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಿಂದ ಅಭಿಯಾನ ಆರಂಭವಾಗಲಿದೆ. ಪಂಚಮಸಾಲಿ ಗೌಡ ಹಾಗೂ ದೀಕ್ಷಾ ಪಂಚಮಸಾಲಿ ಸಮಾಜದವರನ್ನು ಒಗ್ಗೂಡಿಸಿಕೊಂಡು, ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ಹೋರಾಟ ಕುರಿತು ಜಾಗೃತಿ ಮೂಡಿಸಲಾಗುವುದು. ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ ಜನ್ಮದಿನವಾದ ಅ. 1ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ಕೂರಲಾಗುವುದು’ ಎಂದು ಹೇಳಿದರು.

ಸಿ.ಸಿ ಪಾಟೀಲ ಸಂಧಾನಕಾರ:‘ಮೀಸಲಾತಿ ಹೋರಾಟ ಕುರಿತು ಸರ್ಕಾರದ ಜೊತೆ ಸಂಧಾನಕಾರರಾಗಿ ಮಾತುಕತೆ ನಡೆಸಲು ಸಚಿವ ಸಿ.ಸಿ. ಪಾಟೀಲ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಅಲ್ಲದೆ ಮೀಸಲಾತಿಗೆ ಸಂಬಂಧಿಸಿದ ಕುರುಬ, ವಾಲ್ಮೀಕಿ, ಮಡಿವಾಳ, ಗಂಗಾಮತ, ಆದಿ ಬಣಜಿಗ, ಕುಡು ಒಕ್ಕಲಿಗ ಹಾಗೂ ಇತರ ಸಮಾಜಗಳ ಬೇಡಿಕೆಗಳನ್ನು ಸಹ ಸರ್ಕಾರ ಈಡೇರಿಸಬೇಕು ಎಂದು ಸಮುದಾಯ ಒತ್ತಾಯಿಸುತ್ತದೆ’ ಎಂದು ತಿಳಿಸಿದರು.

‘ಒಬಿಸಿಗಳನ್ನು ಗುರುತಿಸುವ ಮತ್ತು ಪ್ರತ್ಯೇಕ ಪಟ್ಟಿ ರೂಪಿಸುವ ಅಧಿಕಾರವನ್ನು ರಾಜ್ಯಗಳಿಗೆ ಕೊಡುವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದೆ. ರಾಜ್ಯ ಸರ್ಕಾರಕ್ಕೆ ನಮ್ಮ ಬೇಡಿಕೆ ಈಡೇರಿಸುವ ಹಾದಿ ಈಗ ಸುಗಮವಾಗಿದೆ. ಇದಕ್ಕೆ ಪೂರಕವಾಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗಶೀಘ್ರ ವರದಿ ನೀಡಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೀಸಲಾತಿಯೇ ಗುರಿ:‘ಕೆಲ ಮಠಾಧೀಶರು ತಮ್ಮ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಿ, ಸಚಿವರನ್ನಾಗಿ ಮಾಡಿ ಎಂದು ಒತ್ತಾಯಿಸುತ್ತಾರೆ. ನಮ್ಮ ಗುರಿ ಸಮುದಾಯಕ್ಕೆ ಮೀಸಲಾತಿ ಕೊಡಿಸುವುದಷ್ಟೇ. ನಂಬಿಕೆ ಇದ್ದವರು ಹೋರಾಟದಲ್ಲಿ ಪಾಲ್ಗೊಳ್ಳಬಹುದು’ ಎಂದುಸ್ವಾಮೀಜಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪಂಚಮಸಾಲಿ ಮಹಾಸಭಾ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ‘ಇನ್ನೂ ಹತ್ತು ಪಂಚಮಸಾಲಿ ಪೀಠಗಳು ಸ್ಥಾಪನೆಯಾದರೂ, ಯಾವ ಪೀಠದ ಅಂತರಂಗದಲ್ಲಿ ಏನಿದೆ ಎಂಬುದು ಸಮುದಾಯದವರಿಗೆ ಗೊತ್ತಾಗಿದೆ’ ಎಂದರು.

ಸಚಿವ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಅವರು ಸಭೆ ಆರಂಭಕ್ಕೂ ಮುಂಚೆ, ಸ್ವಾಮೀಜಿಯನ್ನು ಭೇಟಿ ಮಾಡಿದರು. ‘ಸಭೆಯಲ್ಲಿ ಭಾಗವಹಿಸುವುದಿಲ್ಲ’ ಎಂದು ಸ್ವಕ್ಷೇತ್ರ ನರಗುಂದ ಕಡೆಗೆ ಪ್ರಯಾಣ ಬೆಳೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT