ಹುಬ್ಬಳ್ಳಿ: ‘ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ. ಆದರೆ, ಕೆಲವರು ಸಾಂತ್ವನದ ಹೆಸರಿನಲ್ಲಿ ಅವರ ಮನೆಗೆ ಭೇಟಿ ನೀಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಸಾವಿನ ಮನೆಯಲ್ಲಿ ರಾಜಕಾರಣ ಮಾಡುತ್ತಿದ್ದಾರೆ’ ಎಂದು ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳದ ಗುರುನಾಥ ಉಳ್ಳಿಕಾಶಿ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂಬುದು ನಮ್ಮ ಆಗ್ರಹ. ಆದರೆ, ಕೊಲೆಯ ನಂತರ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸ್ಆ್ಯಪ್ ಸ್ಟೇಟಸ್ಗಳಲ್ಲಿ ನೇಹಾ ಫಯಾಜ್ ಟ್ರೂ ಲವ್ ಸ್ಟೋರಿ ಎಂದು ಹಾಕುತ್ತಿರುವುದು ಖಂಡನೀಯ’ ಎಂದರು.
‘ಈ ಪ್ರಕರಣಕ್ಕೆ ಲವ್ ಜಿಹಾದ್ ರೂಪ ನೀಡಿ, ಸ್ವಹಿತಾಸಕ್ತಿ ಸಾಧಿಸಲು ಪ್ರಯತ್ನಿಸುತ್ತಿರುವುದು ಅಕ್ಷಮ್ಯ. ಈ ಮೂಲಕ ಕರಾವಳಿ ಮಾದರಿಯಲ್ಲಿ ಅವಳಿ ನಗರದಲ್ಲಿ ಶಾಂತಿ ಕದಡುವ ಕೆಲಸವನ್ನು ರಾಷ್ಟ್ರೀಯ ಪಕ್ಷದ ಪ್ರಮುಖರು ಮಾಡುತ್ತಿದ್ದಾರೆ’ ಎಂದು ಅರೋಪಿಸಿದರು.
‘ಪ್ರತಿಷ್ಠಿತ ಕಾಲೇಜಿನ ಆವರಣದಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಶುಲ್ಕ ಪಡೆಯುವ ಸಂಸ್ಥೆ ಅವರ ರಕ್ಷಣೆಗೆ ಕ್ರಮ ಕೈಗೊಳ್ಳದಿರುವುದು ನಿರ್ಲಕ್ಷ್ಯವಲ್ಲವೇ? ವಿದ್ಯಾಸಂಸ್ಥೆ ಸೇರಿದಂತೆ ಅಲ್ಲಿನ ಸೆಕ್ಯುರಿಟಿ ಏಜೆನ್ಸಿ ವಿರುದ್ಧವೂ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿದರು.
ಚುನಾವಣೆ ಮುಗಿದ ನಂತರ ನೇಹಾ ಅವರ ಮನೆಗೆ ಯಾರೂ ಭೇಟಿ ನೀಡುವುದಿಲ್ಲ. ಇದನ್ನು ಅವರ ಮನೆಯವರೂ ಅರ್ಥ ಮಾಡಿಕೊಳ್ಳಬೇಕು ಎಂದರು.
ಕೊಲೆ, ಅತ್ಯಾಚಾರ ಪ್ರಕರಣಗಳನ್ನು ತಡೆಯಲು ಮಠಗಳಿಗೂ ಅನ್ವಯವಾಗುವಂತೆ ಶೀಘ್ರ ವಿಶೇಷ ಕಾನೂನು ಜಾರಿಗೆ ತರಬೇಕು. ಈ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಿ ತಪ್ಪಿತಸ್ಥನಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.