ಮುಗದ: ‘ಬದಲಾಗುತ್ತಿರುವ ಜೀವನಶೈಲಿ, ಆಹಾರ ಪದ್ಧತಿ ಹಾಗೂ ಒತ್ತಡದಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಆರೋಗ್ಯ ಕಾಪಾಡಿಕೊಳ್ಳಲು ನಿಯಮಿತವಾಗಿ ತಪಾಸಣೆಗೆ ಒಳಗಾಗಬೇಕು‘ ಎಂದು ಕೆ.ಎಲ್.ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ ಹೇಳಿದರು.
ಧಾರವಾಡ ತಾಲ್ಲೂಕಿನ ಮುಗದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕ್ಷಮತಾ ಸೇವಾ ಸಂಸ್ಥೆ, ಕೆಎಲ್ಇ ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ಬೆಳಗಾವಿ, ಕೆಎಲ್ಇ ಆಸ್ಪತ್ರೆ ಹುಬ್ಬಳ್ಳಿ, ಕೆಎಲ್ಇ ಕೋ-ಆಪರೇಟಿವ್ ಆಸ್ಪತ್ರೆ ಹುಬ್ಬಳ್ಳಿ, ಜಗದ್ಗುರು ಗಂಗಾಧರ ಸ್ವಾಮೀಜಿ ವೈದ್ಯಕೀಯ ಮಹಾವಿದ್ಯಾಲಯ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
‘ಕಾಯಿಲೆ ಬಂದ ನಂತರ ಆಸ್ಪತ್ರೆಗೆ ಹೋಗುವುದಕ್ಕಿಂತ ಕಾಯಿಲೆ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮೀಣ ಭಾಗದ ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು. ಉಚಿತ ಆರೋಗ್ಯ ತಪಾಸಣೆ ಶಿಬಿರಳಿಂದ ಜನರಿಗೆ ಅನುಕೂಲವಾಗುತ್ತದೆ’ ಎಂದರು.
ಕೆಎಲ್ಇ ಸಂಸ್ಥೆ ನಿರ್ದೇಶಕ ಮಹಾಂತೇಶ ಕವಟಗಿಮಠ ಮಾತನಾಡಿ, ದುಬಾರಿ ವೆಚ್ಚದ ಔಷಧಗಳನ್ನು ಖರೀದಿಸಲು ಬಡವರಿಗೆ ಸಾಧ್ಯವಾಗುವುದಿಲ್ಲ. ಇಂತಹ ಶಿಬಿರಗಳ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.
ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಇಸಿಜಿ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ಮಾಡಲಾಯಿತು. ಎರಡು ಸಾವಿರಕ್ಕೂ ಹೆಚ್ಚು ಜನ ತಪಾಸಣೆಗೆ ಒಳಗಾದರು. ನರರೋಗ ಸಮಸ್ಯೆಯಿಂದ ಬಳುತ್ತಿರುವ 12 ಜನರನ್ನು ಬೆಳಗಾವಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬರುವಂತೆ ಸೂಚಿಸಲಾಯಿತು. 22 ಜನರನ್ನು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಕಸಮಳಗಿ, ಡಾ. ಎಂ.ಜಿ.ಹಿರೇಮಠ, ಡಾ. ಹಂಜಿ, ಡಾ. ಅಲ್ಲಮಪ್ರಭು, ಡಾ. ಅನಿಲ ಬೆಲ್ಲದ, ಸತೀಶ ಮುನವಳ್ಳಿ, ಗೋವಿಂದ ಜೋಶಿ, ನವೀನ ಆಕಲವಾಡಿ, ಕಲ್ಮೇಶ ಬೇಲೂರ, ಬಸವರಾಜ ಕುಂದಗೋಳ ಮಠ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.