ಮಂಗಳೂರು: ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದ ಬಳಿಕ ನಗರದಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ರೈಲು ನಿಲ್ದಾಣಗಳು, ಬಸ್ ನಿಲ್ದಾಣ ಸೇರಿದಂತೆ ಜನನಿಬಿಡ ಸ್ಥಳಗಳಲ್ಲಿ ಸೋಮವಾರ ಸಂಜೆ ಪೊಲೀಸರು ದಿಢೀರ್ ತಪಾಸಣೆ ನಡೆಸಿದ್ದಾರೆ.
ಜನನಿಬಿಡ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಮತ್ತು ಅನುಮಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾ ಇಡುವಂತೆ ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಶ್ವಾನದಳ, ಸ್ಫೋಟಕ ಪತ್ತೆ ಸಾಧನಗಳೊಂದಿಗೆ ಜನನಿಬಿಡ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗಿದೆ.
ಸರ್ಕಾರಿ ಸಂಸ್ಥೆಗಳು ಮತ್ತು ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಓಡಾಡುವ ವಾಹನಗಳು, ನೋಂದಣಿ ಸಂಖ್ಯೆ ಅಳವಡಿಸದೆ ಸಂಚರಿಸುವ ವಾಹನಗಳ ಮೇಲೆ ಪೊಲೀಸರು ನಿಗಾ ಇರಿಸಿದ್ದಾರೆ. ಪ್ರಮುಖ ಕೈಗಾರಿಕೆಗಳು, ವಿಮಾನ ನಿಲ್ದಾಣ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.