ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿ: ಅಂಜಲಿ ಕೊಲೆ ಆರೋಪಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Published 17 ಮೇ 2024, 6:42 IST
Last Updated 17 ಮೇ 2024, 6:42 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಗುರುವಾರ ತಡರಾತ್ರಿ ದಾವಣಗೆರೆಯಲ್ಲಿ ಪೊಲೀಸ್ ವಶಕ್ಕೆ ಪಡೆಯಲಾಗಿದ್ದ ಅಂಜಲಿ ಕೊಲೆ ಆರೋಪಿ ಗಿರೀಶ ಸಾವಂತಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಿರೀಶನ ತಲೆ ಹಾಗೂ ಮುಖದ ಭಾಗಕ್ಕೆ ತೀವ್ರ ಗಾಯವಾಗಿದ್ದರಿಂದ, ಆಸ್ಪತ್ರೆಯಲ್ಲಿನ ಕೈದಿ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಠಡಿ ಸುತ್ತ ಪೊಲೀಸ್ ಭದ್ರತೆ ಹಾಕಲಾಗಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್, 'ಆರೋಪಿ ರೈಲಿನಿಂದ ಬಿದ್ದ ಕಾರಣ, ತಲೆ ಮತ್ತು ಮುಖದ ಮೇಲೆ ಗಂಭೀರ ಗಾಯಗಳಾಗಿವೆ. ಸರಿಯಾಗಿ ಮಾತನಾಡುವ ಸ್ಥಿತಿಯಲ್ಲಿಲ್ಲ. ವೈದ್ಯರು ಅವನ ಆರೋಗ್ಯ ಸುಧಾರಣೆ ಆಗಿರುವ ವರದಿ ನೀಡಿದ ನಂತರ, ಕೋರ್ಟ್‌ಗೆ ಒಪ್ಪಿಸುತ್ತೇವೆ. ನಂತರ ಪೊಲೀಸ್ ಕಸ್ಟಡಿಗೆ ಪಡೆದು ತನಿಖೆ ಮುಂದುವರಿಸಲಾಗುವುದು' ಎಂದರು.

'ಆರೋಪಿ ಕೃತ್ಯ ಎಸಗಿದ ನಂತರ ಮೈಸೂರಿಗೆ ಹೋಗಿದ್ದ. ಮಹಾರಾಷ್ಟ್ರ ಅಥವಾ ಗೋವಾದಲ್ಲಿ ತಲೆಮರೆಸಿಕೊಳ್ಳಬೇಕು ಎಂದುಕೊಂಡು ಯೋಜನೆ ರೂಪಿಸಿರುವುದು ತಿಳಿದು ಬಂದಿದೆ. ದಾವಣಗೆರೆ ಸಮೀಪ ರೈಲಿನಿಂದ ಬಿದ್ದು ಗಾಯಗೊಂಡಿದ್ದ. ರೈಲ್ವೆ ಪೊಲೀಸರ ಮಾಹಿತಿ ಪ್ರಕಾರ, ಸ್ಥಳೀಯ ಪೊಲೀಸರು ಅವನನ್ನು ವಶಕ್ಕೆ ಪಡೆದು ಹುಬ್ಬಳ್ಳಿಗೆ ಕರೆತಂದಿದ್ದಾರೆ' ಎಂದರು.

'ಆರೋಪಿಯು ಅಂಜಲಿಯನ್ನು ಪ್ರೀತಿಸುತ್ತಿದ್ದು, ಅವಳು ಅವನ ನಂಬರ್ ಬ್ಲಾಕ್ ಮಾಡಿದ್ದಳು ಎನ್ನುವ ಮಾಹಿತಿಯಿದೆ. ಆ ಕುರಿತು ಇಬ್ಬರ ಮೊಬೈಲ್ ನಂಬರ್‌ಗಳನ್ನು ಸಿಡಿಆರ್‌ನಲ್ಲಿ ಸಂಗ್ರಹಿಸಿ, ವೈಜ್ಞಾನಿಕ ತನಿಖೆ ನಡೆಸಲಾಗುವುದು' ಎಂದು ಹೇಳಿದರು.

ಮೂಲಗಳ ಪ್ರಕಾರ ವಿಶ್ವಮಾನವ ರೈಲಿನಲ್ಲಿ ಆರೋಪಿಯು ಮಹಿಳೆ ಮೇಲೆ ಹಲ್ಲೆ ನಡೆಸಿದಾಗ, ಪ್ರಯಾಣಿಕರು ಆತನನ್ನು ಹಿಡಿದು ಹಲ್ಲೆ ನಡೆಸಿದ್ದಾರೆ. ಆ ವೇಳೆ ಅವನು ಅವರಿಂದ ತಪ್ಪಿಸಿಕೊಳ್ಳು ರೈಲಿನಿಂದ ಹಾರಿದ್ದಾನೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT