ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸಮಾಜದ ಮುಖಂಡರು ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ನೆಹರೂ ಕ್ರೀಡಾಂಗಣದಿಂದ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ನಂತರ ಚನ್ನಮ್ಮ ಅವರ ಪ್ರತಿಮೆಗೆ ಸ್ವಾಮೀಜಿ ಮಾಲಾರ್ಪಣೆ ಮಾಡಿ, ಧರಣಿ ಕುಳಿತರು.
ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಮುಖ್ಯಮಂತ್ರಿ ಸಮಾಜಕ್ಕೆ ನೀಡಿರುವ ಭರವಸೆಯನ್ನು ನೆನಪಿಸಲು ಧರಣಿ ನಡೆಸಲಾಗುತ್ತಿದೆ. ಅವರು ಆಗಸ್ಟ್ 22 ರ ಒಳಗೆ ಕೊಟ್ಟ ಮಾತಿನಂತೆ ಭರವಸೆ ಈಡೇರಿಸುವ ವಿಶ್ವಾಸ ಇದೆ ಎಂದರು.
ಚನ್ನಮ್ಮ ವೃತ್ತದಲ್ಲಿ ಪ್ರತಿಭಟನಾಕಾರರು ಮಾನವ ಸರಳಪಳಿ ನಿರ್ಮಿಸಿದರು. ಇದರಿಂದ ವೃತ್ತದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.