ನವಲಗುಂದ: ‘ಭಾರತವು ಹಲವು ಕಠಿಣ ಪರಿಸ್ಥಿತಿಗಳನ್ನು ಎದುರಿಸುತ್ತಿದ್ದಾಗಲೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಥಿರತೆಯನ್ನು ಕಾಯ್ದುಕೊಂಡು ಬಂದಿದೆ. ಜಗತ್ತಿನ ಇತರ ರಾಷ್ಟ್ರಗಳಿಗೆ ಹೋಲಿಸಿದಾಗ ಕೋವಿಡ್ನಂತಹ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದೆ’ ಎಂದು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಸಂತೋಷ್ ಹುಬ್ಬಳ್ಳಿ ಅಭಿಪ್ರಾಯಪಟ್ಟರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ, ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಅಭಿಯಾನದ ಮೊದಲ ದಿನದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶಾಭಿಮಾನವನ್ನು ಜಾಗೃತಿಗೊಳಿಸುವುದು ಸ್ವಾತಂತ್ರ್ಯೋತ್ಸವ ಆಚರಣೆ ಮುಖ್ಯ ಉದ್ದೇಶ ಎಂದರು.
ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಂ.ಬಿ. ಬಾಗಡಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಮಾರುತಿ ಡಂಬಳ ಸ್ವಾತಂತ್ರ್ಯದ ಮಹತ್ವವನ್ನು ತಿಳಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಎಂ.ಎಂ. ಲಷ್ಕರ್ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಎನ್.ಎಸ್.ಎಸ್ ಘಟಕ ಹಾಗೂ ರೇಂಜರ್ಸ್ ಆ್ಯಂಡ್ ರೋವರ್ಸ್ ಘಟಕಗಳ ಸದಸ್ಯರು ಹಾಗೂ ವಿದ್ಯಾ ವಿದ್ಯಾರ್ಥಿಗಳು ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸಿದರು.
ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಮಹಾನಂದಾ ಹಿರೇಮಠ, ಐಕ್ಯೂಎಸಿ ಸಂಯೋಜಕ ವಿನಾಯಕ ಮಿರಜಕರ್, ಎನ್.ಎಸ್.ಎಸ್ ಘಟಕದ ಸಂಚಾಲಕ ಬಸವರಾಜ್ ಸೂಡಿ, ಮಾನಸ ಹೆಚ್, ಆಶಾ ಎನ್.ಆರ್, ಸವಿತಾ ಚಿಕ್ಕಣ್ಣವರ್, ಸುಗುಣ ಡಿ.ವಿ ಇದ್ದರು.