ಹುಬ್ಬಳ್ಳಿ: ಕಲ್ಯಾಣ ಕರ್ನಾಟಕದ ಸರ್ಕಾರಿ ನೌಕರರಿಗೆ ಬೆಳಗಾವಿ ವಿಭಾಗದಲ್ಲಿ ಶೇ 8ರಷ್ಟು ನೇಮಕಾತಿ ಮತ್ತು ಮುಂಬಡ್ತಿ ಮೀಸಲಾತಿ ನೀಡಲು ಸರ್ಕಾರದ ಆದೇಶ ಇದ್ದರೂ ಪಾಲನೆ ಆಗುತ್ತಿಲ್ಲ ಎಂದು ಅಹಿಂದ ಚಿಂತಕರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೈಬಣ್ಣಾ ಜಮಾದಾರ ದೂರಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಅಧಿಕಾರಿಗಳ ವರ್ತನೆಯಿಂದಾಗಿ ಕಲ್ಯಾಣ ಕರ್ನಾಟಕ ಭಾಗದ ನೌಕರರಿಗೆ ಅನ್ಯಾಯವಾಗಿದೆ. ಈ ಕುರಿತು ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆ ಭಾಗದ ಕಂದಾಯ ಇಲಾಖೆ, ಪೊಲೀಸ್, ಶಿಕ್ಷಣ, ಸಾರಿಗೆ, ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ನೌಕರರು ಜೇಷ್ಠತಾ ಪಟ್ಟಿಯ ಅನ್ವಯ 8-12 ವರ್ಷ ಹಿರಿಯರಿದ್ದರೂ ಮುಂಬಡ್ತಿ ಸಿಗುತ್ತಿಲ್ಲ ಎಂದು ಹೇಳಿದರು
ಮುಂಬಡ್ತಿ ನೀಡದೆ ಸರ್ಕಾರದ ಆದೇಶ ಉಲ್ಲಂಘಿಸಿದ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಹೆಚ್ಚುವರಿ ಆಯುಕ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಅವರ ಅಮಾನತಿಗೆ ಒತ್ತಾಯಿಸಿ, ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಲಾಗುವುದು.
ಇದೇ ರೀತಿ ಇತರ ಇಲಾಖೆಯ ಆಯುಕ್ತರಿಗೂ ಮನವಿ ಸಲ್ಲಿಸಲಾಗುವುದು. ಹೈಕ ವಿಭಾಗದ ಸರ್ಕಾರಿ ನೌಕರರಿಗೆ ಮುಂಬಡ್ತಿ ನೀಡುವಂತೆ ಒತ್ತಾಯಿಸಿ, ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ವೇದಿಕೆಯ ಖಜಾಂಚಿ ಸಂಜು ಹೊಡಲ್ಕರ್, ಸಂಗಣ್ಣಾ ನಿಂಬರ್ಗಾ, ನಾಗರಾಜ ಸೋಲಾಪೂರಕರ ಇದ್ದರು.