ಹುಬ್ಬಳ್ಳಿ: ‘ಕಲ್ಲಿದ್ದಲು ಗಣಿಗಾರಿಕೆಯಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ (ಎಫ್ಡಿಐ) ಅವಕಾಶ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ’ ಎಂದು ಕೇಂದ್ರದ ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಾರತವು ಪ್ರಪಂಚದಲ್ಲಿಯೇ ಹೆಚ್ಚು ಕಲ್ಲಿದ್ದಲು ಹೊಂದಿದ ಐದನೇ ರಾಷ್ಟ್ರವಾಗಿದೆ. ಸಾಕಷ್ಟು ಕಲ್ಲಿದ್ದಲು ದೊರೆಯುತ್ತಿದ್ದರೂ, ಹಿಂದಿನ ಯುಪಿಎ ಸರ್ಕಾರ ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿರಲಿಲ್ಲ’ ಎಂದು ದೂರಿದರು.
‘ಮುಂದಿನ ಮೂರು ವರ್ಷಗಳಲ್ಲಿ ಭಾರತ ಕಲ್ಲಿದ್ದಲು ಉತ್ಪಾದನೆಯಲ್ಲಿ ಸಂಪೂರ್ಣ ಸ್ವಾವಲಂಬಿಯಾಗಲಿದೆ. ಕಲ್ಲಿದ್ದಲು ಗಣಿಗಾರಿಕೆ ಹಾಗೂ ವ್ಯಾಪಾರ ಸುಲಭವಾಗಲಿದೆ’ ಎಂದರು.