ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂಬುದು ಊಹಾಪೋಹ: ದಿಂಗಾಲೇಶ್ವರ ಶ್ರೀ

ನಾಳೆ ಮಠಾಧೀಶರ ಚಿಂತನ ಮಂಥನ ಸಭೆ
Published 26 ಮಾರ್ಚ್ 2024, 7:15 IST
Last Updated 26 ಮಾರ್ಚ್ 2024, 7:15 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವರ್ತಮಾನದ ಸಮಸ್ಯೆಗಳ ಕುರಿತು ಚರ್ಚಿಸಲು ನಗರದ ಮೂರು ಸಾವಿರ ಮಠದಲ್ಲಿ ಮಾರ್ಚ್ 27ರಂದು ಬೆಳಿಗ್ಗೆ 9.30ಕ್ಕೆ ಮಠಾಧೀಶರ ಚಿಂತನ ಮಂಥನ ಸಭೆ ಕರೆಯಲಾಗಿದೆ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಸಾಮಾಜಿಕ, ಧಾರ್ಮಿಕ, ರಾಜಕೀಯ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ರಾಜ್ಯದ ಎಲ್ಲ ಮಠಾಧೀಶರಿಗೆ ಆಹ್ವಾನ ನೀಡಲಾಗಿದೆ ಎಂದರು.

ಇತಿಹಾಸದಿಂದಲೂ ಸಮಾಜದಲ್ಲಿ ಸಮಸ್ಯೆಗಳು ಎದುರಾದಾಗ ಮಠಾಧೀಶರು, ಸನ್ಯಾಸಿಗಳು ಧ್ವನಿ ಎತ್ತಿದ್ದಾರೆ. ಇದು ಒಂದು ಸಮಾಜಕ್ಕೆ ಸೀಮಿತವಾದ ಸಭೆಯಲ್ಲ. ಎಲ್ಲ‌ ಮಠಾಧೀಶರು ಇದರಲ್ಲಿ ಭಾಗವಹಿಸಿ ಸಮಸ್ಯೆಗಳ‌ ಪರಿಹಾರಕ್ಕೆ ಸಲಹೆ, ಸೂಚನೆ ನೀಡಲಿದ್ದು, ಈ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.

'ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂಬುದು ಕೇವಲ ಊಹಾಪೋಹ. ಸ್ಪರ್ಧೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಒಬ್ಬ ಮಠಾಧೀಶನಾಗಿ ವೈಯಕ್ತಿಕ ತೀರ್ಮಾನ ತೆಗೆದುಕೊಳ್ಳುವ ಶಕ್ತಿ, ಸ್ವಾತಂತ್ರ್ಯ ನನಗೆ ಇಲ್ಲ' ಎಂದು ಸ್ಪಷ್ಟಪಡಿಸಿದರು.

ಪ್ರಾಮಾಣಿಕರಿಗೆ ಅಪವಾದ ಸಹಜ. ಅದರಲ್ಲಿಯೂ ನನ್ನ ಮೇಲೆ ಹೆಚ್ಚು ಆರೋಪಗಳು ಬರುತ್ತವೆ. ಆದರೆ ಯಾವುದೇ ಆಮಿಷಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ನನಗೆ ಯಾವುದೇ ಕುಟುಂಬವಿಲ್ಲ. ಮಠಾಧೀಶರು ಸಮಾಜದ ಮಕ್ಕಳು. ಎಲ್ಲ ಆರೋಪಗಳನ್ನು ಎದುರಿಸುವ ಶಕ್ತಿ‌‌ ನನಗೆ ಇದೆ ಎಂದರು.

ರಾಜಕಾರಣಿಗಳು ಅಧಿಕಾರದ ಮದದಿಂದ ದಾರಿ ತಪ್ಪುತ್ತಿದ್ದಾರೆ. ಅವರನ್ನು ಸರಿ ದಾರಿಗೆ ತರುವ ಕೆಲಸವನ್ನು ಮಠಾಧೀಶರು ಮಾಡಲಿದ್ದಾರೆ. ಅದು ನಮ್ಮ ಕರ್ತವ್ಯ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT