ಹುಬ್ಬಳ್ಳಿ: ‘ದೇಶದ ಪ್ರತಿಯೊಬ್ಬ ನಾಗರಿಕರೂ ಸ್ವಾತಂತ್ರ್ಯದ ಆಶಯಗಳನ್ನು ಎಲ್ಲರೂ ಅರಿತುಕೊಳ್ಳಬೇಕು. ಹಕ್ಕುಗಳನ್ನು ಅನುಭವಿಸುವುದರ ಜತೆಗೆ, ಕರ್ತವ್ಯಗಳನ್ನು ನಿಭಾಯಿಸುವ ಮೂಲಕ ಹೊಣೆಗಾರಿಕೆ ಪ್ರದರ್ಶಿಸಬೇಕು’ ಎಂದು ಪಾಲಿಕೆ ಆಯುಕ್ತ ಸುರೇಶ ಹಿಟ್ನಾಳ ಹೇಳಿದರು.
ಮಹಾನಗರ ಪಾಲಿಕೆ ವತಿಯಿಂದ ನಗರದ ಈದ್ಗಾ ಮೈದಾನದಲ್ಲಿ ಗುರುವಾರ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ನಾವೆಲ್ಲರೂ ಅನುಭವಿಸುತ್ತಿರುವ ಈ ಸ್ವಾತಂತ್ರ್ಯದ ಹಿಂದೆ ಇರುವ ಸಾವಿರಾರು ಮಂದಿಯ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಬೇಕು’ ಎಂದರು.
‘ಭಾರೀ ಮಳೆಯಿಂದಾಗಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮಳೆಯ ಅತಿವೃಷ್ಟಿ ಹಾಗೂ ಪ್ರವಾಹ ಜನರ ಬದುಕನ್ನು ನಲುಗಿಸಿದೆ. ಅವರಿಗೆ ಮತ್ತೆ ಹೊಸ ಬದುಕು ಕಟ್ಟಿಕೊಳ್ಳಲು ಎಲ್ಲರೂ ಕೈ ಜೋಡಿಸಬೇಕು. ಈಗಾಗಲೇ ನೂರಾರು ಮಂದಿ ಅವರ ನೆರವಿಗೆ ಧಾವಿಸಿದ್ದಾರೆ. ಆದರೆ, ಸಂತ್ರಸ್ತರಿಗೆ ಪುನರ್ವಸತಿ ಒದಗಿಸುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದ್ದು, ಇದಕ್ಕೂ ಎಲ್ಲರ ಸಹಕಾರ ಬೇಕು’ ಎಂದು ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆಯ ವಿಶೇಷಾಧಿಕಾರಿ ಎಸ್.ಎಚ್. ನರೇಗಲ್, ಮಾಜಿ ಮೇಯರ್ಗಳಾದ ಸುಧೀರ ಸರಾಫ್, ಡಿ.ಕೆ. ಚವ್ಹಾಣ, ಮಾಜಿ ಸದಸ್ಯರಾದ ರಾಜಣ್ಣ ಕೊರವಿ, ಶಿವು ಮೆಣಸಿನಕಾಯಿ, ಪಾಲಿಕೆಯ ಸೂಪರಿಂಟೆಂಡೆಂಟ್ ಎಂಜಿನಿಯರ್ ಮಹೇಶ್ ಇದ್ದರು.