ಕುಂದಗೋಳ: ತಾಲ್ಲೂಕಿನ ಯರಗುಪ್ಪಿ ಗ್ರಾಮದ ಶಾಲಾ, ಕಾಲೇಜುಗಳಲ್ಲಿ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಶೌಚಾಲಯದ ವ್ಯವಸ್ಥೆ ಇಲ್ಲ. ಮಕ್ಕಳು ಮಲಮೂತ್ರ ವಿಸರ್ಜನೆಗೆ ಬಯಲನ್ನೇ ಅವಲಂಬಿಸಿದ್ದಾರೆ. ಶಾಲೆಯ ಎದುರಿನ ಚರಂಡಿಯಲ್ಲಿ ಸದಾ ನೀರು ನಿಂತಿರುತ್ತದೆ. ಮಕ್ಕಳು ಊಟದ ಪ್ಲೇಟು ತೊಳೆದ ನೀರು ಇದೇ ಚರಂಡಿ ಸೇರುತ್ತಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಕುಡಿಯುವ ನೀರಿನ ಸೌಲಭ್ಯ ಇಲ್ಲ. ಮನೆಯಿಂದಲೇ ಬಾಟಲಿಗಳಲ್ಲಿ ನೀರನ್ನು ತಂದು ಕುಡಿಯುವ ಸ್ಥಿತಿ ಇದೆ. ನೀರು ಖಾಲಿಯಾದರೆ ಶಾಲೆಯ ಅಕ್ಕಪಕ್ಕದ ಕಿರಾಣಿ ಅಂಗಡಿ, ಹೋಟೆಲ್ಗಳಿಗೆ ತೆರಳಿ ನೀರು ಕುಡಿಯಬೇಕಾದ ಸ್ಥಿತಿ ಎದುರಾಗಿದೆ.
ಗ್ರಾಮದ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಶೌಚಾಲಯ ಸೇರಿದಂತೆ ಮೂಲ ಸೌಕರ್ಯಗಳ ಕೊರತೆ ಇದೆ.
‘ಗ್ರಾಮದ ಕೆಲವು ಕಿಡಿಗೇಡಿಗಳು ಶೌಚಾಲಯದ ಬಾಗಿಲು ಮುರಿದಿದ್ದಾರೆ. ಹೀಗಾಗಿ ಶೌಚಾಲಯ ಉಪಯೋಗಕ್ಕೆ ಬಾರದಂತಾಗಿದೆ. ಶಾಲೆಯ ಸುತ್ತ ಸಿ.ಸಿ ಕ್ಯಾಮೆರಾ ಅಳವಡಿಸಬೇಕು’ ಎಂದು ಶಿಕ್ಷಕರೊಬ್ಬರು ಹೇಳಿದರು.