ಹುಬ್ಬಳ್ಳಿ: ‘ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಜೂನ್ 7 ರಂದು ಅಧಿಕಾರ ವಹಿಸಿಕೊಳ್ಳಲಿದ್ದು, ಕಾರ್ಯಕ್ರಮ ವೀಕ್ಷಣೆಗೆ ರಾಜ್ಯದ 8 ಸಾವಿರ ಕಡೆಗಳಲ್ಲಿ ಎಲ್ಇಡಿ ಸ್ಕ್ರೀನ್ ಅಳವಡಿಸಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಗುರುವಾರ ಪಕ್ಷದ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಮಾರಂಭ ಸರಳವಾಗಿ ನಡೆಯಲಿದೆ. ಪಕ್ಷದ ಕಾರ್ಯಕರ್ತರಿಗೆ ವೀಕ್ಷಣೆಗಾಗಿ ವ್ಯವಸ್ಥೆ ಮಾಡಲಿದ್ದು, 4 ಲಕ್ಷ ಜನ ವೀಕ್ಷಿಸಲಿದ್ದಾರೆ’ ಎಂದರು.
‘ರಾಜ್ಯದಾದ್ಯಂತ ಎಲ್ಲ ಗ್ರಾಮ ಪಂಚಾಯ್ತಿಯಿಂದ ಹಿಡಿದು ಜಿಲ್ಲಾ ಮಟ್ಟದವರೆಗೆ ವೀಕ್ಷಣೆಗೆ ಅವಕಾಶ ಮಾಡಲಾಗುವುದು. ವ್ಯವಸ್ಥೆ ಮಾಡುವಂತೆ ಎಲ್ಲ ಕ್ಷೇತ್ರಗಳ ನಾಯಕರಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.
‘ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮೇಲ್ವಿಚಾರಣೆಗೆ ವೀಕ್ಷಕರ ನೇಮಕ ಮಾಡಲಾಗಿದೆ.ಧಾರವಾಡ ಜಿಲ್ಲೆಯ ನಾಯಕರಿಗೂ ಜವಾಬ್ದಾರಿ ವಹಿಸಲಾಗಿದೆ. ಸಿದ್ಧತೆ ಕುರಿತು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ, ಅವರೊಂದಿಗೆ ಚರ್ಚೆ ನಡೆಸುತ್ತಿದ್ದೇನೆ’ ಎಂದು ತಿಳಿಸಿದರು.
‘ಇಲ್ಲಿವರೆಗೆ ಕಾಂಗ್ರೆಸ್ ಮಾಸ್ ಪಕ್ಷವಾಗಿತ್ತು. ಇನ್ನು ಮುಂದೆ ಕೇಡರ್ ಬೇಸ್ ಪಕ್ಷವಾಗಿ ಹೊರಹೊಮ್ಮಲಿದೆ. ಪಕ್ಷದ ಕಾರ್ಯಕರ್ತರಿಗೆ ಸೂಕ್ತ ರೀತಿಯಲ್ಲಿ ತರಬೇತಿ ನೀಡುವ ಯೋಜನೆ ಇದೆ. ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆ ಬಗ್ಗೆ ಗಂಭೀರ ಚಿಂತನೆ ಮಾಡಲಾಗುತ್ತಿದೆ ಎಂದರು.
‘ಕೋವಿಡ್ –19 ವೇಳೆ ಪಕ್ಷ ಜನರ ಸಂಕಷ್ಟಗಳಿಗೆ ಸ್ಪಂದಿಸಿದೆ. ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು’ ಎಂದು ಹೇಳಿದರು.
ಶಾಸಕಿ ಕುಸುಮಾವತಿ ಶಿವಳ್ಳಿ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮುಖಂಡರಾದ ಅನಿಲಕುಮಾರ ಪಾಟೀಲ, ಅಲ್ತಾಫ ಹಳ್ಳೂರ, ನಾಗರಾಜ ಛಬ್ಬಿ, ವೀರಣ್ಣ ಮತ್ತಿಕಟ್ಟಿ,
ಅಂತರ ಮರೆತ ನಾಯಕರು: ಕಾಂಗ್ರೆಸ್ ಸಭೆಯಲ್ಲಿ ನಾಯಕರು ಹಾಗೂ ಕಾರ್ಯಕರ್ತರು ಅಂತರ ಮರೆತಿದ್ದರು.
ಸತೀಶ ಜಾರಕಿಹೊಳಿ ಸೇರಿದಂತೆ ವೇದಿಕೆಯಲ್ಲಿದ್ದ ಬಹುತೇಕ ನಾಯಕರು ಒಬ್ಬರಿಗೊಬ್ಬರು ಒತ್ತಿಕೊಂಡೇ ಕುಳಿತಿದ್ದರು. ಪಕ್ಷದ ಕಾರ್ಯಕರ್ತರೂ ಕೂಡ ನಾಯಕರನ್ನೇ ಅನುಸರಿಸಿದರು. ನೂರಕ್ಕೂ ಹೆಚ್ಚು ಜನರು ಸೇರಿದ್ದರು. ಕೆಲವರು ಮಾಸ್ಕ್ ಸಹ ಧರಿಸಿರಿಲಿಲ್ಲ.