ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆ | ಬೆಳಗಾವಿಯಿಂದ ಸ್ಪರ್ಧೆ; ಇನ್ನೂ ತೀರ್ಮಾನಿಸಿಲ್ಲ: ಶೆಟ್ಟರ್‌

Published 14 ಮಾರ್ಚ್ 2024, 8:01 IST
Last Updated 14 ಮಾರ್ಚ್ 2024, 8:01 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಹಂಚಿಕೆ ಬಗ್ಗೆ ಪಕ್ಷದ ವರಿಷ್ಠರು ನನ್ನ ಜೊತೆ ಚರ್ಚೆ ಮಾಡುತ್ತಿದ್ದಾರೆ. ಆದರೆ, ನಾನಿನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಕ್ಷದ ವರಿಷ್ಠರು ಹಾಗೂ ಬೆಳಗಾವಿಯ ಮುಖಂಡರ ಜೊತೆ ಚರ್ಚಿಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ’ ಎಂದು ಬಿಜೆಪಿ ಮುಖಂಡ ಜಗದೀಶ ಶೆಟ್ಟರ್‌ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದಕ್ಕೂ ಮುಂಚೆ ಧಾರವಾಡ, ಹಾವೇರಿ ಕ್ಷೇತ್ರದ ಬಗ್ಗೆ ಚರ್ಚೆಯಾಗಿತ್ತು. ನಾನು ಆಸಕ್ತಿ ಹೊಂದಿದ್ದೆ ಎಂದು ವರಿಷ್ಠರ ಗಮನಕ್ಕೆ ತಂದಿದ್ದೆ. ಈಗ ಇವೆರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಅದರ ಬಗ್ಗೆ ಚರ್ಚಿಸಲ್ಲ’ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸುವುದು ನಮ್ಮ ಗುರಿ. ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಯಾರೇ ಅಭ್ಯರ್ಥಿಯಾದರೂ ಅವರ ಗೆಲುವಿಗೆ ಪ್ರಯತ್ನಿಸುವೆ. ಪ್ರಚಾರ ಮಾಡುವೆ ಎಂದು ಹೇಳಿದರು.

ಪಕ್ಷಕ್ಕೆ ಮರು ಸೇರ್ಪಡೆಯಾಗುವ ಸಂದರ್ಭದಲ್ಲಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ಅವರ ನಡೆದ ಚರ್ಚೆಯನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ‘ಗೋ ಬ್ಯಾಕ್‌ ಶೆಟ್ಟರ್‌’ ಎಂಬ ಅಭಿಯಾನ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈ ರೀತಿಯ ಅಭಿಪ್ರಾಯವನ್ನು ಕೆಲವರು ಮಾತ್ರ ವ್ಯಕ್ತಪಡಿಸಿದ್ದಾರೆ. ವರಿಷ್ಠರು ಹೀಗೆ ಇರುವುದಿಲ್ಲ. ತುಮಕೂರಲ್ಲಿ ವಿ.ಸೋಮಣ್ಣ ವಿರುದ್ಧವೂ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಆದರೂ, ಪಕ್ಷದ ವರಿಷ್ಠರು ಸೋಮಣ್ಣ ಅವರಿಗೆ ಟಿಕೆಟ್‌ ನೀಡಿದ್ದಾರಲ್ಲವೇ’ ಎಂದರು.

ಪಶ್ಚಾತಾಪ ಪಡಲ್ಲ: ಕಾಂಗ್ರೆಸ್‌ಗೆ ಹೋದಾಗ ಪಶ್ಚಾತಾಪ ಪಟ್ಟಿಲ್ಲ. ಈಗ ಅಲ್ಲಿಂದ ವಾಪಸ್‌ ಬಂದಾಗಲೂ ಪಶ್ಚಾತಾಪ ಪಡಲ್ಲ. ಪಶ್ಚಾತಾಪ ಪಡುವ ವ್ಯಕ್ತಿ ನಾನಲ್ಲ ಎಂದು ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT