ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಟೂರ: ಧಾರಾಕಾರ ಮಳೆ; ಮನೆಗಳಿಗೆ ನುಗ್ಗಿದ ನೀರು

Last Updated 6 ಅಕ್ಟೋಬರ್ 2022, 16:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ತಾಲ್ಲೂಕಿನ ಮಂಟೂರ ಗ್ರಾಮದ ಬೆಣ್ಣೆಹಳ್ಳ ಹಾಗೂ ಕೆರೆಗೆ ಕೋಡಿ ಬಿದ್ದಿದ್ದು, ಈ ಭಾಗದ ಹಲವು ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಬಸ್‌ ನಿಲ್ದಾಣ, ಶಾಲೆ ಹಾಗೂ ಗ್ರಂಥಾಲಯಗಳಿಗೂ ನೀರು ಸೇರಿದೆ.

ಗುರುವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಬೆಣ್ಣೆ ಹಳ್ಳಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು, ಕೆರೆ ತುಂಬಿದೆ. ಇದರಿಂದ ಗ್ರಾಮದ ತಗ್ಗು ಪ್ರದೇಶವಾದ ಅಂಬೇಡ್ಕರ್ ನಗರ ವ್ಯಾಪ್ತಿಯಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ಮಳೆಯಿಂದಾಗಿ ಸಾಕು ಪ್ರಾಣಿಗಳಿಗೂ ಸಂಕಷ್ಟ ಎದುರಾಗಿದ್ದು, ಗ್ರಾಮಸ್ಥರು ಜಾನುವಾರು ಹಾಗೂ ಸಾಕು ಪ್ರಾಣಿಗಳನ್ನು ಬೇರೆಡೆ ಸ್ಥಳಾಂತರಿಸಿದ್ದಾರೆ.

ಗ್ರಾಮದ ಬಸವರಾಜ ಸುಂಕದ ಸೇರಿದಂತೆ ಹಲವರ ಮನೆಗಳು ಧರೆಗುರಳಿವೆ. ‘ಪ್ರತಿ ಬಾರಿ ಮಳೆಯಾದಾಗಲೂ ಇದೇ ಸಮಸ್ಯೆ ಉಂಟಾಗುತ್ತಿದ್ದು, ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು’ ಎಂದು ಗ್ರಾಮದ ಪ್ರಭಾವತಿ ಇರತಗೌಡರ ಒತ್ತಾಯಿಸಿದ್ದಾರೆ.

ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ಗ್ರಾಮಕ್ಕೆ ಭೇಟಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, ‘ಮಳೆಯಿಂದ ಗ್ರಾಮದ ಕೆರೆ ಒಡೆಯಬಾರದೆಂದು ಗ್ರಾಮಸ್ಥರು ಕೆರೆಗೆ ಸೇರುವ ನೀರಿಗೆ ಒಡ್ಡು ಕಟ್ಟಿದ್ದಾರೆ. ಇದರಿಂದ ನೀರು ಹರಿಯುವ ಮಾರ್ಗ ಬದಲಾಗಿ ಗ್ರಾಮದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಜೆಸಿಬಿ ಮೂಲಕ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT