‘ಆಹಾರ ಧಾನ್ಯಗಳ ಮೇಲೆ ಶೇ 5ರಷ್ಟು ತೆರಿಗೆ ವಿಧಿಸುವ ಪ್ರಸ್ತಾವ ಕೇಂದ್ರ ಮಾಡಿದ್ದು, ಆ ಕುರಿತು ಜುಲೈ 18ರಂದು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ. ಈ ನಿಟ್ಟಿನಲ್ಲಿ ವರ್ತಕರ ಒಮ್ಮತದ ಅಭಿಪ್ರಾಯದ ಮೇರೆಗೆ ಎಪಿಎಂಸಿಯಲ್ಲಿನ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಎರಡು ದಿನ ಬಂದ್ ಹಮ್ಮಿಕೊಂಡಿದ್ದೇವೆ. ರಾಜ್ಯದ ಎಲ್ಲ ವರ್ತಕರ ಸಂಘದ ಪದಾಧಿಕಾರಿಗಳು ಜುಲೈ 16 ಮತ್ತು 17ರಂದು ನಗರದ ಡೆನಿಸನ್ಸ್ ಹೋಟೆಲ್ನಲ್ಲಿ ಸಭೆ ನಡೆಸಲಿದ್ದು, ಅಲ್ಲಿ ಕೂಲಂಕಷವಾಗಿ ಚರ್ಚೆ ನಡೆಯಲಿದೆ. ಕೇಂದ್ರ ಸರ್ಕಾರ ತೆರಿಗೆ ವಿಧಿಸುವ ನಿರ್ಧಾರ ತೆಗೆದುಕೊಂಡಿದ್ದೇ ಆದರೆ, ಎಲ್ಲ ವರ್ತಕರ ಅಭಿಪ್ರಾಯದ ಮೇಲೆ ಮುಂದಿನ ಹೋರಾಟದ ರೂಪರೇಷೆ ಸಿದ್ಧಪಡಿಸಲಾಗುವುದು’ ಎಂದು ಎಪಿಎಂಸಿ ವ್ಯಾಪಾರಸ್ಥರ ಮುಖಂಡ ಬಸವರಾಜ ಎಕಲಾಸಪುರ ತಿಳಿಸಿದರು.