ಹುಬ್ಬಳ್ಳಿ: ಬೆಂಗಳೂರು-ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಅರಸೀಕೆರೆಯಲ್ಲಿ ನಿಲುಗಡೆ ಮಾಡಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಅವರಿಗೆ ಮಂಗಳವಾರ ಮನವಿಪತ್ರ ಸಲ್ಲಿಸಿದರು.
ಹುಬ್ಬಳ್ಳಿಯ ನೈರುತ್ಯ ರೈಲ್ವೆ ಕಚೇರಿಗೆ ಸಂಸದ ಪ್ರಜ್ವಲ್ ರೇವಣ್ಣ ಅವರೊಂದಿಗೆ ಭೇಟಿಯಾದ ಅವರು, ‘ವಂದೇ ಭಾರತ್ ರೈಲು ಸದ್ಯ ಹುಬ್ಬಳ್ಳಿ ಜಂಕ್ಷನ್, ದಾವಣಗೆರೆ ಮತ್ತು ಯಶವಂತಪುರದಲ್ಲಿ ಮಾತ್ರ ನಿಲುಗಡೆ ಆಗುತ್ತದೆ. ಅರಸೀಕೆರೆಯಲ್ಲಿ ನಿಲುಗಡೆ ಮಾಡಿದರೆ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ’ ಎಂದರು.
‘ಹಾಸನ ತಾಲ್ಲೂಕಿನ ಮೊಸಳೆ ಹೊಸಹಳ್ಳಿ ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಬೇಕು’ ಎಂದು ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.