ಶಿವಮೊಗ್ಗ: ‘ಟಿಕೆಟ್ ಕೈತಪ್ಪಿದ ಕಾರಣ, ಪ್ರಬಲ ಆಕಾಂಕ್ಷಿಯಾಗಿದ್ದ ಬೇಳೂರು ಗೋಪಾಲಕೃಷ್ಣ ಸಹಜವಾಗಿ ಅಸಮಾಧಾನಗೊಂಡಿದ್ದಾರೆ. ಪಕ್ಷದ ಉನ್ನತ ನಾಯಕರ ಸಮ್ಮುಖದಲ್ಲಿ ಅವರ ಬೇಸರ ಶಮನಗೊಳಿಸಲಾಗುವುದು’ ಎಂದು ಸಾಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸಾಗರ ಕ್ಷೇತ್ರದಿಂದ ಸ್ಪರ್ಧಿಸಲು ಐವರು ಆಕಾಂಕ್ಷಿಗಳಿದ್ದರು. ಮೂವರನ್ನು ಈಗಾಗಲೇ ಸಮಾಧಾನಪಡಿಸಲಾಗಿದೆ. ಬೇಳೂರು ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು. ಸಮಸ್ಯೆ ಬಗೆಹರಿಸಲಾಗುವುದು ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ಬೆಂಬಲಿಸುವುದಿಲ್ಲ: ಸಾಗರದಲ್ಲಿ ಮಂಗಳವಾರ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಗೋಪಾಲಕೃಷ್ಣ ಬೇಳೂರು, ‘ಬಿಜೆಪಿಯಲ್ಲೇ ಮುಂದುವರಿಯುತ್ತೇನೆ. ಜೆಡಿಎಸ್ ಅಥವಾ ಕಾಂಗ್ರೆಸ್ ಸೇರುವ ಯೋಚನೆಯನ್ನೇನೂ ಮಾಡಿಲ್ಲ. ಆದರೆ, ಹರತಾಳು ಹಾಲಪ್ಪ ಅವರನ್ನಂತೂ ಬೆಂಬಲಿಸುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.