ಧಾರವಾಡ: ನಗರದ ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಮಲ್ಲಿಕಾರ್ಜುನ ಮನಸೂರ ಅವರ 113ನೇ ಜನ್ಮ ದಿನ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಸಂಗೀತೋತ್ಸವ ಡಿ. 31 ರಂದು ನಡೆಯಲಿದೆ.
ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಸಂಜೆ 5.30ಕ್ಕೆ ಸಮಾರಂಭ ಆರಂಭವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಸಂತೋಷ ಲಾಡ್ ಅತಿಥಿಗಳಾಗಿ ಪಾಲ್ಗೊಳ್ಳಿದ್ದಾರೆ. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ.
ಪುರಸ್ಕಾರಕ್ಕೆ ಆಯ್ಕೆಯಾದ ಪುಣೆಯ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ವಿದ್ಯಾಧರ ವ್ಯಾಸ್ ಹಾಗೂ ಧಾರವಾಡದ ವಾದ್ಯ ಸಂಗೀತಗಾರ ರವಿಕಿರಣ ನಾಕೋಡ, ಗದುಗಿನ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ವೆಂಕಟೇಶ ಆಲಕೋಡ ಅವರಿಂದ ರಾತ್ರಿ 7 ರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಡಿ. 31 ರಂದು ಬೆಳಿಗ್ಗೆ 9.30 ಗಂಟೆಗೆ ಮಲ್ಲಿಕಾರ್ಜುನ ಮನಸೂರ ಅವರ ಸಮಾಧಿಗೆ ಪೂಜೆ ನೆರವೇರಿಸಲಾಗುವುದು. ನಂತರ ಅಕ್ಕಮಹಾದೇವಿ ಆಲೂರ, ಹುಬ್ಬಳ್ಳಿಯ ಚಂದ್ರಿಕಾ ಕಾಮತ್, ಹಾಗೂ ಉಜಿರೆಯ ಮಿಥುನ ಚಕ್ರವರ್ತಿ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಡುವರು ಎಂದು ಪ್ರಕಟಣೆ ತಿಳಿಸಿದೆ.