ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಯುವಜನೋತ್ಸವ: ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರಿಂದ ಉತ್ಸವಕ್ಕೆ ಚಾಲನೆ
Last Updated 11 ಜನವರಿ 2023, 13:14 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಅವಳಿನಗರದಲ್ಲಿ ಐದು ದಿನ ನಡೆಯಲಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಸಮಾರಂಭಕ್ಕೆ ನಗರದ ರೈಲ್ವೆ ಮೈದಾನ ಸಂಪೂರ್ಣ ಸಿದ್ಧವಾಗಿದೆ. ಜ.12ರಂದು ಸಂಜೆ 4ಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಗುರುವಾರ ಮಧ್ಯಾಹ್ನ 3.40ಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಏಳು ಕಿ.ಮೀ. ದೂರದಲ್ಲಿರುವ ರೈಲ್ವೆ ಮೈದಾನಕ್ಕೆ ಝಡ್‌ ಪ್ಲಸ್‌ ಭದ್ರತೆಯೊಂದಿಗೆ ತೆರಳಲಿದ್ದಾರೆ. ಸಂಜೆ 4ಕ್ಕೆ ವೇದಿಕೆ ಕಾರ್ಯಕ್ರಮ ಆರಂಭವಾಗಿ ಸಂಜೆ 5.15ಕ್ಕೆ ಮುಕ್ತಾಯವಾಗಲಿದ್ದು, ಪ್ರಧಾನಿಯವರು ‌ಅರ್ಧ ಗಂಟೆ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಲಾವಿದರ ತಾಲೀಮು ನಡೆಯಿತು.

ರಾಜ್ಯಪಾಲ ಥಾವರಚಂದ್‌ ಗೆಹಲೋತ್‌, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಅನುರಾಗ್ ಠಾಕೂರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ. ನಾರಾಯಣಗೌಡ, ಶಂಕರಪಾಟೀಲ ಮುನೇನಕೊಪ್ಪ, ಮೇಯರ್‌ ಈರೇಶ ಅಂಚಟಗೇರಿ ಹಾಗೂ ಸ್ಥಳೀಯ ಶಾಸಕರು, ವಿಧಾನಪರಿಷತ್‌ ಸದಸ್ಯರು ಸೇರಿ ವೇದಿಕೆ ಮೇಲೆ 25 ಗಣ್ಯರಿಗೆ ‌ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಹಾವೇರಿಯಲ್ಲಿ ಸಿದ್ಧಪಡಿಸುವ ‌‘ಏಲಕ್ಕಿ ಹಾರ’ ಮತ್ತು ‘ಏಲಕ್ಕಿ ಪೇಟ’ ಹಾಕಿ, ಕಸೂತಿ ಕಲೆಯ ಹ್ಯಾಂಡ್‌ ಲೂಮ್‌ ಶಾಲು ಹೊದಿಸಿ, ಬೀದರ್‌ನ ಬಿದಿರಿ ಕಲೆಯ ಸ್ವಾಮಿ ವಿವೇಕಾನಂದರ ಮೂರ್ತಿ ಹಾಗೂ ತೇಗದ ಚೌಕಟ್ಟಿನಲ್ಲಿ ವಿನ್ಯಾಸಗೊಳಿಸಲಾದ ಧಾರವಾಡ ಜಿಲ್ಲೆಯ ಗರಗ ಹಾಗೂ ಬೆಂಗೇರಿಯಲ್ಲಿ ತಯಾರಾದ ರಾಷ್ಟ್ರಧ್ವಜವನ್ನು ಪ್ರಧಾನಿಗೆ ನೀಡಿ ಜಿಲ್ಲಾಡಳಿತ ಸನ್ಮಾನಿಸಲಿದೆ. ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿದ್ದು, ನಗರದ ಎಲ್ಲ ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT